ಬೆಂಗಳೂರು: ರಾಜ್ಯದಲ್ಲಿ ಕೊರೊನಾದ ಹೊಸ ರೂಪಾಂತರಿ ಒಮಿಕ್ರಾನ್ ನ ಎರಡು ಪ್ರಕರಣಗಳು ಪತ್ತೆಯಾಗುತ್ತಿದ್ದಂತೆ ರಾಜ್ಯ ಸರ್ಕಾರ ಸೋಂಕು ವ್ಯಾಪಿಸದಂತೆ ತಡೆಗಟ್ಟುವ ಸಲುವಾಗಿ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ. ಹೊಸ ಮಾರ್ಗಸೂಚಿಗಳನ್ನು ಹೊರಡಿಸಲಾಗಿದ್ದು, ಶಾಲಾ ಮಕ್ಕಳ ಪೋಷಕರಿಗೆ ಲಸಿಕೆ ಕಡ್ಡಾಯಗೊಳಿಸಲಾಗಿದೆ. ಜೊತೆಗೆ ಮದುವೆ ಸಮಾರಂಭಗಳಲ್ಲಿ 500 ಜನ ಅತಿಥಿಗಳು ಮಾತ್ರ ಭಾಗವಹಿಸಬಹುದು ಎಂದು ತಿಳಿಸಲಾಗಿದೆ. ಇದರೊಂದಿಗೆ ಕೋವಿಡ್ ಪರೀಕ್ಷೆಗಳನ್ನು ಹೆಚ್ಚಿಸಲು ಸಹ ಸರ್ಕಾರ ತೀರ್ಮಾನಿಸಿದೆ.ವಿಮಾನ ನಿಲ್ದಾಣ ಹಾಗೂ ಅಂತರರಾಜ್ಯ ಗಡಿಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪ್ರತಿದಿನ ಒಂದು ಲಕ್ಷ ಪರೀಕ್ಷೆಗಳನ್ನು ನಡೆಸಬೇಕು ಎಂದು ಸೂಚಿಸಲಾಗಿದ್ದು, ಈ ಪೈಕಿ ಶೇ.70 ರಷ್ಟು ಆರ್.ಟಿ.ಪಿ.ಸಿ.ಆರ್. ಹಾಗೂ ಶೇ.30ರಷ್ಟು ರಾಪಿಡ್ ಆಂಟಿಜೆನ್ ಟೆಸ್ಟ್ ಆಗಿರಬೇಕು ಎಂದು ಆದೇಶಿಸಲಾಗಿದೆ.
ಅದರಲ್ಲೂ ಮುಖ್ಯವಾಗಿ ಆರೋಗ್ಯ ಕಾರ್ಯಕರ್ತರು, ವಯಸ್ಸಾದವರು, ಪ್ಯಾರಾಮೆಡಿಕಲ್ ಮತ್ತು ನರ್ಸಿಂಗ್ ಕಾಲೇಜುಗಳಲ್ಲಿನ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಹಾಗೂ ಸಹಜ ಅಸ್ವಸ್ಥತೆ ಹೊಂದಿರುವವರನ್ನು ಕಡ್ಡಾಯವಾಗಿ ಪರೀಕ್ಷೆಗೆ ಒಳಪಡಿಸುವಂತೆ ನಿರ್ದೇಶಿಸಲಾಗಿದೆ.