ಬೆಂಗಳೂರು: ರೈತರು ಹೂ, ಸೊಪ್ಪು ,ತರಕಾರಿ, ಜೋಳ ಇತರೆ ಕೃಷಿ ಉತ್ಪನ್ನಗಳನ್ನು ಕೆ.ಆರ್ ಮಾರುಕಟ್ಟೆಗೆ ತಂದು ಮಾರುವ ಸಮಯದಲ್ಲಿ ಬಿಬಿಎಂಪಿ ಅಧಿಕಾರಿಗಳು ಮಾರಾಟ ಮಾಡಲು ಬಿಡದೆ ದೌರ್ಜನ್ಯ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷರಾದ ಕೋಡಿಹಳ್ಳಿ ಚಂದ್ರಶೇಖರ್ ರವರ ನೇತೃತ್ವದಲ್ಲಿ ಕೆಆರ್ ಮಾರುಕಟ್ಟೆ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
ಈ ವೇಳೆ ಪ್ರತಿಭಟನೆ ನಿಲ್ಲಿಸಿ ಮಾತುಕತೆಗೆ ಬರುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಆಹ್ವಾನಿಸಿದ ಮೇರೆಗೆ ಕೋಡಿಹಳ್ಳಿ ಚಂದ್ರಶೇಖರ್ ಅವರ ನೇತೃತ್ವದಲ್ಲಿ ನಿಯೋಗ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮಾರುಕಟ್ಟೆಯ ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಿದರು. ಈ ವೇಳೆ ಮುಖ್ಯಮಂತ್ರಿಗಳು ಜೂ.8 ರಂದು ಎಲ್ಲ ಮಾರುಕಟ್ಟೆಗಳನ್ನು ತೆರೆಯಲು ಆದೇಶ ನೀಡುವುದಾಗಿ ತಿಳಿಸಿದರಲ್ಲದೆ, ಮಾರುಕಟ್ಟೆಯಲ್ಲಿ ರೈತರ ಮೇಲೆ ದೌರ್ಜನ್ಯ ಮಾಡುತ್ತಿರುವ ಕೆ.ಆರ್. ಮಾರುಕಟ್ಟೆಯ ಜಂಟಿ ಆಯುಕ್ತರಾದ ಚಿದಾನಂದ ಅವರನ್ನು ಅಲ್ಲಿಂದ ವರ್ಗಾವಣೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪ್ರತಿಭಟನೆ ವೇಳೆ ಮಾತನಾಡಿದ ಕೋಡಿಹಳ್ಳಿ ಚಂದ್ರಶೇಖರ್ ಕೆ.ಆರ್.ಮಾರುಕಟ್ಟೆಯಲ್ಲಿರುವ ಜಂಟಿ ಆಯುಕ್ತರಾದ ಚಿದಾನಂದರವರು ಮಾರುಕಟ್ಟೆಗೆ ಬರುವ ರೈತರ ಮೇಲೆ ಅವರ ಸಿಬ್ಬಂದಿಯನ್ನು ಬಿಟ್ಟು ದೌರ್ಜನ್ಯ ನಡೆಸುುತ್ತಾರೆ. ಈ ಮಾರುಕಟ್ಟೆಯಲ್ಲಿ ವ್ಯಾಪಾರ ಮಾಡುವ ವ್ಯಾಪಾರಸ್ಥರಿಗೆ ವ್ಯಾಪಾರ ಮಾಡಲು ಬಿಡದೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ ಅವರು, ಕೂಡಲೇ ಕೆಆರ್ ಮಾರುಕಟ್ಟೆ, ಕಲಾಸಿಪಾಳ್ಯ ಮಾರುಕಟ್ಟೆ, ಸೋಪಿನ ಮಾರುಕಟ್ಟೆ, ಹೂವಿನ ಮಾರುಕಟ್ಟೆಗಳಲ್ಲಿ ವ್ಯಾಪಾರ ಮಾಡಲು ಅನುವು ಮಾಡಿಕೊಡಬೇಕು ಹಾಗೂ ರೈತರು ತರುವ ಹೂ, ಜೋಳ, ಸೋಪು, ತರಕಾರಿ ಇನ್ನು ಮುಂತಾದ ಕೃಷಿ ಉತ್ಪನ್ನಗಳ ಮಾರಾಟಕ್ಕೆ ಯಾವುದೇ ತೊಂದರೆ ನೀಡಬಾರದು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಬ್ಬಣಿ ಶಿವಪ್ಪ, ಬೆಂಗಳೂರು ನಗರ ಜಿಲ್ಲಾಧ್ಯಕ್ಷ ರಘು, ರಾಜ್ಯ ಕಾರ್ಯದರ್ಶಿ ಸುರೇಶ್, ಗೋಪಾಲಕೃಷ್ಣ, ನಾಗಣ್ಣ, ಮುನಿಸ್ವಾಮಿ, ತಪರಜ್, ಅಸಿಫ್, ದಿವಾಕರ್, ಅದಿಲ್ ಇನ್ನು ಮೊದಲಾದವರು ಭಾಗವಹಿಸಿದ್ದರು.