ಬೆಂಗಳೂರು : ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಣೆ ಬಗ್ಗೆ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ . ಈ ಕುರಿತು ಚರ್ಚೆ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ .
ಜಿಲ್ಲಾಧಿಕಾರಿಗಳ ಜತೆಗಿನ ವಿಡಿಯೋ ಸಂವಾದದ ಮೊದಲು ಸಿಎಂ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.ಕಂದಾಯ ಸಚಿವ ಆರ್ ಅಶೋಕ್ ಸೇರಿದಂತೆ ಹಲವು ಸಚಿವರುಗಳು ಲಾಕ್ ಡೌನ್ ವಿಸ್ತರಣೆಯ ಕುರಿತು ಒಲವು ಹೊಂದಿದ್ದಾರೆ . ಈ ಹಿನ್ನೆಲೆಯಲ್ಲಿ ಒಂದೆರಡು ದಿನಗಳಲ್ಲಿ ಸರ್ಕಾರ ಅಂತಿಮ ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆಯಿದೆ.
ಇಂದು ಸಾಯಂಕಾಲ ಮುಖ್ಯಮಂತ್ರಿ ಯಡಿಯೂರಪ್ಪನವರು ಸಭೆ ಕರೆದಿದ್ದಾರೆ, ಅದರಲ್ಲಿ ನಾವೆಲ್ಲರೂ ಕೋವಿಡ್-19 ವಿಚಾರವಾಗಿ ಕೂಲಂಕಷವಾಗಿ ಚರ್ಚೆ ಮಾಡಿ ಲಾಕ್ ಡೌನ್ ವಿಸ್ತರಣೆ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ತಿಳಿಸಿದ್ದಾರೆ.
ಇಂದು ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಕೊರೋನಾ ಎರಡನೇ ಅಲೆ ವ್ಯಾಪಕವಾಗಿ ಗ್ರಾಮೀಣ ಪ್ರದೇಶಗಳಿಗೆ ಹಬ್ಬುತ್ತಿದ್ದು ಅಲ್ಲಿ ಸೋಂಕಿತರನ್ನು ಯಾವ ರೀತಿ ಕ್ವಾರಂಟೈನ್ ಗೆ ಒಳಪಡಿಸಬೇಕು, ಅವರಿಗೆ ಯಾವ ರೀತಿ ಚಿಕಿತ್ಸೆ ನೀಡಬೇಕು, ಹಳ್ಳಿ ಜನರಿಗೆ ಯಾವ ರೀತಿ ಅರಿವು ಮೂಡಿಸಬೇಕೆಂಬ ಬಗ್ಗೆ ಒತ್ತು ನೀಡಲಾಗುವುದು ಎಂದು ಹೇಳಿದರು.