ಬೆಂಗಳೂರು: ಕೊಡಗು ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ವನ್ಯಪ್ರಾಣಿ ಮಾನವ ಸಂಘರ್ಷ ಮಿತಿ ಮೀರಿದ್ದು, ಹುಲಿ ಹಾಗೂ ಕಾಡಾನೆಗಳ ನಿರಂತರ ದಾಳಿಯಿಂದ ಜೀವಹಾನಿ, ಬೆಳೆ ಹಾನಿ ಹಾಗೂ ಜಾನುವಾರುಗಳ ಮೇಲಿನ ದಾಳಿಯನ್ನು ತಡೆಗಟ್ಟಲು ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ ಎಂದು ಅರಣ್ಯ, ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಉಮೇಶ್ ವಿ ಕತ್ತಿ ಅವರು ತಿಳಿಸಿದರು.
ವಿಧಾನ ಪರಿಷತ್ತಿನ ಅಧಿವೇಶನದ ಕಲಾಪದ ವೇಳೆ ವಿಧಾನ ಪರಿಷತ್ತಿನ ಸದಸ್ಯರಾದ ಶ್ರೀಮತಿ ವೀಣಾ ಅಚ್ಚಯ್ಯ ಇವರು ನಿಯಮ 72ರಡಿಯಲ್ಲಿ ನೀಡಿರುವ ಸೂಚನ ಪತ್ರಕ್ಕೆ ಉತ್ತರಿಸಿದ ಸಚಿವರು, ಪ್ರಸಕ್ತ ಸಾಲಿನಲ್ಲಿ 51.37 ಕಿ.ಮೀ ಸೋಲಾರ್ ತಂತಿ ಬೇಲಿ ನಿರ್ಮಾಣ ಕಾಮಗಾರಿ ಕೈಗೊಂಡಿದ್ದು, ಕಾಮಗಾರಿಯು ಪ್ರಗತಿಯಲ್ಲಿದೆ ಎಂದು ತಿಳಿಸಿದರು.
ಅರಣ್ಯ ಅಂಚಿನ ಗ್ರಾಮಗಳಲ್ಲಿನ ಆನೆಗಳು ಕಾಡಿನಿಂದ ನಾಡಿಗೆ ಬಾರದಂತೆ 45.41 ಕಿ.ಮೀ ಆನೆ ತಡೆ ಕಂದಕ ನಿರ್ಮಾಣ ಕಾಮಗಾರಿ ಕೈಗೊಂಡಿದ್ದು ಕಾಮಗಾರಿಯು ಪ್ರಗತಿಯಲ್ಲಿದೆ. ಅರಣ್ಯ ಅಂಚಿನ ಗ್ರಾಮಗಳಲ್ಲಿನ ರೈತರಿಗೆ ಶೇಕಡ 50:50 ರಿಯಾಯಿತಿಯನ್ನು ಸೋಲಾರ್ ಬೇಲಿ ನಿರ್ಮಾಣವನ್ನು ಕೈಗೊಳ್ಳಲು ಅರಣ್ಯ ಇಲಾಖೆಯಿಂದ ಶೇಕಡ 50ರಷ್ಟು ಧನ ಸಹಾಯ ನೀಡಲಾಗುತ್ತಿದ್ದು, 2019-20ನೇ ಸಾಲಿನಲ್ಲಿ 4,754 ಕಿ.ಮೀ ಕಾಮಗಾರಿ ಪ್ರಗತಿಯಲ್ಲಿರುವುದಾಗಿ ತಿಳಿಸಿದರು.
ಕಾಡಾನೆಗಳ ಹಾವಳಿಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು 2019-20ನೇ ಸಾಲಿನಲ್ಲಿ 13.42 ಕಿ.ಮೀ ರೈಲ್ವೆ ಹಳಿಗಳ ಬ್ಯಾರಿಕೇಡ್ ನಿರ್ಮಾಣ ಮಾಡಲು ಉದ್ದೇಶಿಸಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಕೊಡಗು ಜಿಲ್ಲೆಯ ಅರಣ್ಯ ವೃತ್ತದ ವ್ಯಾಪ್ತಿಯ ವಲಯಗಳಲ್ಲಿ ಕಾಡಾನೆ ಹಾವಳಿಯನ್ನು ತಡೆಯುವ ಸಲುವಾಗಿ 12 ತುರ್ತು ನಿರ್ವಹನೆ ರಾಪಿಡ್ ರೆಸ್ಪಾನ್ಸ್ ತಂಡಗಳನ್ನು ರಚಿಸಿ ಕಾರ್ಯ ನಿರ್ವಹಿಸಲಾಗುತ್ತಿದೆ.
ಆಯ್ದ ವಲಯಗಳಲ್ಲಿ 21 ಕಾಡಾನೆಗಳನ್ನು ಮರಳಿ ಕಾಡಿಗೆ ಓಡಿಸುವ ತಂಡ ರಚನೆ ಮಾಡಲಾಗಿರುತ್ತದೆ. ಕಾಡಾನೆ ಇರುವಿಕೆ ಅವುಗಳ ಚಲನವಲನಗಳ ಬಗ್ಗೆ ಸಾರ್ವಜನಿಕರಿಗೆ ರೈತರಿಗೆ ಮಾಹಿತಿ ನೀಡುವ ಎಸ್.ಎಂ.ಎಸ್. ಅಲರ್ಟ್ ಸಿಸ್ಟಂ ಕಾರ್ಯ ನಿರ್ವಹಿಸುತ್ತಿದೆ. ವನ್ಯಪ್ರಾಣಿಗಳ ದಾಳಿಯಿಂದ ಬಾದಿತ ಗ್ರಾಮಗಳ ಜನರೊಂದಿಗೆ ಸಂಪರ್ಕ ಸಭೆಯನ್ನು ನಡೆಸಲಾಗುತ್ತಿದೆ. ಕೊಡಗು ಜಿಲ್ಲೆಯಲ್ಲಿ 2014ರಿಂದ ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ 11 ಕಾಡಾನೆಗಳನ್ನು ಸೆರೆಹಿಡಿದು ಸ್ಥಳಾಂತರ ಮಾಡಲಾಗಿದೆ. ಕೊಡುಗು ಜಿಲ್ಲೆಯಲ್ಲಿ 9 ಆನೆಗಳಿಗೆ ರೇಡಿಯೋ ಕಾಲರ್ಗಳನ್ನು ಅಳವಡಿಸಿ ಅವುಗಳ ಚಲನವಲನಗಳ ಬಗ್ಗೆ ನಿಗಾವಹಿಸಲಾಗುತ್ತಿದೆ. ನಾಗರಹೊಳೆ ವ್ಯಾಪ್ತಿಯಲ್ಲಿ ರಕ್ಷಣಾ ಕೆಲಸಗಳಿಗಾಗಿ ಎಸ್.ಟಿ.ಪಿ.ಎಫ್ ತಂಡ ನೇಮಕ ಮಾಡಿ ರಕ್ಷಣಾ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಸರ್ಕಾರದ ಆದೇಶ ಸಂ. 31 ಎಫ್ ಪಿ ಸಿ 2016 ದಿನಾಂಕ: 07-08-2017ರನ್ವಯ ಕೊಡಗು ಜಿಲ್ಲೆಯಲ್ಲಿ ಮಾನವ – ವನ್ಯಜೀವಿ ಸಂಘರ್ಷದಿಂದ ಬಾರಿತರಾದ ವ್ಯಕ್ತಿಗಳಿಗೆ ಸಾಮಾಜಿಕ ಮತ್ತು ಆರ್ಥಿಕ ಬೆಂಬಲ ನೀಡುವುದರ ಜೊತೆಗೆ ಸದರಿ ಉದ್ದೇಶವನ್ನು ಈಡೇರಿಸಲು ಅಗತ್ಯವಿರುವ ಮೂಲಸೌಕರ್ಯಗಳನ್ನು ಒದಗಿಸುವ ಉದ್ದೇಶದಿಂದ “ಕೊಡಗು ಮಾನವ-ವನ್ಯಪ್ರಾಣಿ ಸಂಘರ್ಷ ಉಪಶಮನ ಪ್ರತಿಷ್ಠಾನ”ವನ್ನು ವೃತ್ತ ಮಟ್ಟದಲ್ಲಿ ಸ್ಥಾಪಿಸಲಾಗಿದೆ ಎಂದು ಸಚಿವರು ಸದನದಲ್ಲಿ ತಿಳಿದರು.