ಬೆಂಗಳೂರು: ಮೈಸೂರಿನ 2017ರ ದಸರಾ ಮಹೋತ್ಸವವನ್ನು ಸಾಂಪ್ರದಾಯಿಕವಾಗಿ ಆಚರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ ಸೇರಿದ್ದ ಉನ್ನತಮಟ್ಟದ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗಿದೆ. ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಮೈಸೂರು ದಸರಾ ಉನ್ನತ ಮಟ್ಟದ ಸಮಿತಿ ಸಭೆ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೆಪ್ಟೆಂಬರ್ 21 ರಂದು ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸುವ ಮೂಲಕ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಾಗುವುದು.30 ರಂದು ವಿಜಯ ದಶಮಿ ಜಂಬೂಸವಾರಿ ನಡೆಯಲಿದೆ. ಉದ್ಘಾಟಕರನ್ನು ಆಯ್ಕೆ ಮಾಡುವ ಅಧಿಕಾರವನ್ನು ಸಮಿತಿಯು ಮುಖ್ಯಮಂತ್ರಿಗಳಿಗೆ ನೀಡಿದೆ. ಇನ್ನು ಒಂದು ವಾರದೊಳಗೆ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ದಸರಾ ಮಹೋತ್ಸವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕಾರಿ ಸಮಿತಿ ರಚಿಸಲಾಗಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಸಚಿವ ತನ್ವೀರ್ ಸೇಠ್ ಅವರು ಸಮಿತಿ ಉಪಾಧ್ಯಕ್ಷರಾಗಿದ್ದು, ಕನ್ನಡ ಮತ್ತು ಸಂಸ್ಕೃತಿ ಸಚಿವೆ ಶ್ರೀಮತಿ ಉಮಾಶ್ರೀ ಹಾಗೂ ಪ್ರವಾಸೋದ್ಯಮ ಸಚಿವ ಪಿಯಾಂಕ್ ಖರ್ಗೆ ಮತ್ತಿತರ ಗಣ್ಯರು ಅಧಿಕಾರಿಗಳು ಈ ಸಮಿತಿಯ ಸದಸ್ಯರಾಗಿರುತ್ತಾರೆ.
ಪ್ರಚಾರದ ಜವಾಬ್ದಾರಿಯನ್ನು ಪ್ರವಾಸೋದ್ಯಮ ಇಲಾಖೆಗೆ ವಹಿಸಲಾಗಿದೆ. ಈ ಬಾರಿ ವಸ್ತು ಪ್ರದರ್ಶನದಲ್ಲಿ ಜಿಲ್ಲಾ ಪಂಚಾಯಿತಿಗಳು ಮಳಿಗೆ ಪ್ರಾರಂಭಿಸುವುದು ಬೇಡ. ಸರ್ಕಾರದ ಪ್ರಮುಖ 15 ರಿಂದ 20 ಇಲಾಖೆಗಳು ದಸರಾ ಉದ್ಘಾಟನೆಯ ದಿನದಂದೇ ವಸ್ತು ಪ್ರದರ್ಶನ ಮಳಿಗೆಯನ್ನು ಪ್ರಾರಂಭಿಸಬೇಕು ಎಂದು ಮುಖ್ಯ ಕಾರ್ಯದರ್ಶಿಗಳು ಸುತ್ತೋಲೆ ಹೊರಡಿಸಲಿದ್ದಾರೆ ಎಂದು ತಿಳಿಸಿದರು. ಸೆಪ್ಟೆಂಬರ್ 30 ರಂದು ಮಧ್ಯಾಹ್ನ 1.15 ಕ್ಕೆ ನಂದೀಪೂಜೆ ಮಾಡುವ ಮೂಲಕ ದಸರಾ ಮೆರವಣಿಗೆಗೆ ಚಾಲನೆ ನೀಡಲಾಗುವುದು. 3.15 ಕ್ಕೆ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡಲಾಗುವುದು. ದಸರಾ ಮೆರವಣಿಗೆಯನ್ನು ಇನ್ನಷ್ಟು ಆಕರ್ಷಣೀಗೊಳಿಸಲು ಕ್ರಮ ಕೈಗೊಳ್ಳಲಾಗುವುದು. ಎಲ್ಲಾ ಜಿಲ್ಲೆಗಳ ಸ್ಥಬ್ಧಚಿತ್ರಗಳೊಂದಿಗೆ ರಾಜ್ಯ ಹೊರರಾಜ್ಯದ ವಿಶಿಷ್ಠ ಕಲೆಗಳ ಪ್ರದರ್ಶನವು ನಡೆಯಲಿದೆ.
ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ದಸರಾ ಸಂದರ್ಭದಲ್ಲಿ ವಾಹನ ಪ್ರವೇಶ ತೆರಿಗೆ ಇದ್ದಲ್ಲಿ ವಿನಾಯಿತಿ ನೀಡಲು ಕ್ರಮಕೈಗೊಳ್ಳಲಾಗುವುದು. ಕಳೆದ ವರ್ಷ ದಸರಾಕ್ಕೆ 13.2 ಕೋಟಿ ರೂ. ವೆಚ್ಚವಾಗಿದ್ದು ಈ ವರ್ಷ 15 ಕೋಟಿ ರೂ. ವೆಚ್ಚವಾಗಬಹುದೆಂದು ಅಂದಾಜಿಸಲಾಗಿದೆ. ಇದರೊಂದಿಗೆ ಈ ಬಾರಿಯ ವಿಶ್ವಪ್ರವಾಸೋದ್ಯಮ ದಿನಾಚರಣೆಯನ್ನು ಸೆಪ್ಟೆಂಬರ್ 27 ರಂದು ಮೈಸೂರಿನಲ್ಲೇ ಹಮ್ಮಿಕೊಳ್ಳಲಾಗುವುದೆಂದು ತಿಳಿಸಿದರು. ಮೈಸೂರು ನಗರದಲ್ಲಿ ರಾಮಸ್ವಾಮಿ ವೃತ್ತದಿಂದ ಬನ್ನಿಮಂಟಪದವರೆಗೆ ದಸರಾ ಮೆರವಣಿಗೆ ನಡೆಯಲಿರುವ ರಸ್ತೆಯನ್ನು ಕಾಂಕ್ರೀಂಟ್ ರಸ್ತೆಯಾಗಿ ಅಭಿವೃದ್ಧಿಪಡಿಸಲಾಗಿದೆ. ನಗರದ ಇತರ ರಸ್ತೆಗಳ ಅಭಿವೃದ್ಧಿಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಮೈಸೂರು ಮಹಾನಗರಪಾಲಿಕೆ ಹಾಗೂ ಲೋಕೋಪಯೋಗಿ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದರು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವೆ ಉಮಾಶ್ರೀ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಶ್ರೀ ತನ್ವೀರ್ ಸೇಠ್, ಪ್ರವಾಸೋದ್ಯಮ ಸಚಿವ ಪ್ರಿಯಾಂಕ್ ಖರ್ಗೆ, ಮೈಸೂರು ಜಿಲ್ಲೆಯ ಶಾಸಕರುಗಳು, ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಶ್ರೀಮತಿ ನಯಿಮಾ ಸುಲ್ತಾನೆ, ಮೇಯರ್ ರವಿಕುಮಾರ್ ಮೊದಲಾದವರು ಪಾಲ್ಗೊಂಡಿದ್ದರು.