ಬೆಂಗಳೂರು: ಹಿಜಾಬ್ ವಿವಾದಕ್ಕೆ ಸಂಬಂಧಿಸಿದ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿ, ಸರ್ಕಾರ ನೀಡಿದ್ದ ಕಡ್ಡಾಯ ಸಮವಸ್ತ್ರ ಆದೇಶವನ್ನು ಎತ್ತಿ ಹಿಡಿದಿದೆ. ನ್ಯಾಯಾಲಯದ ಕುರಿತು ಸಿಎಂ ಬಸವರಾಜ್ ಬೊಮ್ಮಾಯಿ ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ.
ಸಮವಸ್ತ್ರದ ಕುರಿತು ನ್ಯಾಯಾಲಯ ಒಳ್ಳೆಯ ತೀರ್ಪು ನೀಡಿದೆ. ಇದು ಮಕ್ಕಳ ಭವಿಷ್ಯ ಶಿಕ್ಷಣದ ಪ್ರಶ್ನೆಯಾಗಿದೆ. ಮಕ್ಕಳಿಗೆ ವಿದ್ಯೆಗಿಂತ ಮತ್ತೊಂದು ಇಲ್ಲ. ನ್ಯಾಯಾಲಯದ ಆದೇಶವನ್ನು ಎಲ್ಲರು ಪಾಲಿಸಬೇಕು. ಎಲ್ಲರೂ ಸಹಕಾರ ಕೊಟ್ಟು ಶಾಂತಿ ಸೌಹಾರ್ದತೆ ಕಾಪಾಡಬೇಕು ಎಂದು ಮನವಿ ಮಾಡಿಕೊಂಡರು.
ಶಿಕ್ಷಕರು, ವಿದ್ಯಾರ್ಥಿಗಳು, ಪೋಷಕರು ಈ ತೀರ್ಪನ್ನು ಒಪ್ಪಿಕೊಳ್ಳಬೇಕು. ತೀರ್ಪಿನ ಅನ್ವಯ ಶಿಕ್ಷಣ ಕೊಡಲು ಎಲ್ಲರು ಸಹಕಾರ ಕೊಡಬೇಕು. ಎಲ್ಲ ವಿದ್ಯಾರ್ಥಿಗಳು ಹೈಕೋರ್ಟ್ ಆದೇಶ ಪಾಲನೆ ಮಾಡಬೇಕು. ತರಗತಿ ಬಹಿಷ್ಕಾರ ಮಾಡದೇ, ಪರೀಕ್ಷೆಗೆ ಹಾಜರಾಗಬೇಕು ಎಂದು ಹೇಳಿದರು.
ಈಗಾಗಲೇ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಟ್ಟು ನಿಟ್ಟಾಗಿ ಮಾಡಿದ್ದೇವೆ. ಯಾರಾದರೂ ಕಾನೂನು ಕೈಗೆತ್ತಿಕೊಂಡ್ರೆ ಗೃಹ ಇಲಾಖೆಯಿಂದ ತಕ್ಕ ಪಾಠ ಆಗಲಿದೆ ಎಂದು ಕಾನೂನು ಕದಡುವವರಿಗೆ ಸಿಎಂ ಬೊಮ್ಮಾಯಿ ಎಚ್ಚರಿಕೆ ನೀಡಿದರು.
ಮಕ್ಕಳ ಹಿತದೃಷ್ಟಿಯಿಂದ ಎಲ್ಲರೂ ಕೂಡ ನ್ಯಾಯಾಲಯದ ಆದೇಶ ಪಾಲಿಸಬೇಕು. ಕೋರ್ಟ್ ಆದೇಶವನ್ನು ಎಲ್ಲರೂ ಕೂಡ ಒಪ್ಪಿಕೊಳ್ಳಬೇಕು ಎಂದು ಸಮುದಾಯದ ನಾಯಕರಿಗೆ ಸಿಎಂ ಮನವಿ ಮಾಡಿಕೊಂಡರು.