ಬೆಂಗಳೂರು : ಹಿಜಾಬ್ ವಿವಾದ ಸಂಬಂಧ ಇಂದು ಅರ್ಜಿ ವಿಚಾರಣೆ ಮುಂದುವರೆಸಿದ್ದ ಕರ್ನಾಟಕ ಹೈಕೋರ್ಟ್ ತ್ರಿಸದಸ್ಯ ಪೀಠ ಮತ್ತೆ ವಿಚಾರಣೆಯನ್ನು ನಾಳೆಗೆ ಮುಂದೂಡಿದೆ.
ಉಡುಪಿಯಲ್ಲಿ ಶುರುವಾದ ಹಿಜಾಬ್ ವಿವಾದ ಈಗ ರಾಷ್ಟ್ರಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಇನ್ನು ಕರ್ನಾಟಕ ಹೈಕೋರ್ಟ್ ಮುಖ್ಯನ್ಯಾಯಮೂರ್ತಿ ರಿತುರಾಜ್ ಅವಸ್ತಿ, ಕೃಷ್ಣ ಎಸ್ ದೀಕ್ಷಿತ್, ಖಾಜಿ ಜೈಬುನ್ನಿಸಾ ಮೊಹಿಯುದ್ದೀನ್ ಪ್ರಕರಣ ವಿಚಾರಣೆ ನಡೆಸುತ್ತಿದ್ದಾರೆ. ಅರ್ಜಿಯ ವಿಚಾರಣೆ ಇತ್ಯರ್ಥ ಆಗುವವರೆಗೂ ಯಾರು ಧಾರ್ಮಿಕ ಗುರುತು ಬಳಸುವಂತಿಲ್ಲ ಎಂದು ಪುನರುಚ್ಚರಿಸಿದ ನ್ಯಾಯ ಪೀಠ ವಿಚಾರಣೆಯನ್ನು ನಾಳೆ ಮಧ್ಯಾಹ್ನ 2.30ಕ್ಕೆ ಮುಂದೂಡಿದರು.
ಇಂದು ಅರ್ಜಿದಾರರ ಪರ ವಕೀಲ ದೇವದತ್ ಕಾಮತ್ ವಾದ ಮಂಡಿಸಿದರು. ಸಮವಸ್ತ್ರ, ಹಿಜಾಬ್ ಧರಿಸುವ ಬಗ್ಗೆ ಸರ್ಕಾರದ ಆದೇಶಗಳು, ಶಾಸಕರ ಆದೇಶಗಳು, ಕಾಲೇಜು ಅಭಿವೃದ್ಧಿಗೆ ಸಮಿತಿಗೆ ಹಿಜಾಬ್ ನಿರ್ಬಂಧಿಸುವ ಅಧಿಕಾರವಿಲ್ಲ ಎಂದು ವಾದ ಮಂಡಿಸಿದರು. ಇದೇ ವೇಳೆ ಕಾಮತ್ ಅವರು ಕೇರಳ, ಮದ್ರಾಸ್, ಬಾಂಬೆ ಮಲೇಷಿಯಾ ಕೋರ್ಟ್ ಗಳ ತೀರ್ಪನ್ನು ಉಲ್ಲೇಖಿಸಿದರು.
ವಿದ್ಯಾರ್ಥಿಗಳು ಕಾಲೇಜುಗಳಿಗೆ ದಾಖಲಾದಾಗಿನಿಂದಲೂ ಹಿಜಾಬ್ ಧರಿಸುತ್ತಿದ್ದರು. ಅದು ಸಮವಸ್ತ್ರ ಬಣ್ಣದ ಹಿಜಾಬ್ ಅನ್ನೇ ಧರಿಸುತ್ತಿದ್ದರು. ಈ ಆಚರಣೆಯನ್ನು ತಪ್ಪದೇ ಪಾಲಿಸುತ್ತಿದ್ದಾರೆ. ಹೀಗಾಗಿ ವಿದ್ಯಾರ್ಥಿಗಳು ಹಿಜಾಬ್ ಧರಿಸಲು ಅವಕಾಶ ನೀಡಬೇಕು ಎಂದು ವಾದಿಸುತ್ತಿದ್ದಾರೆ.
ಸುದೀರ್ಘ ವಿಚಾರಣೆ ನಡೆಸಿದ ತ್ರಿಸದಸ್ಯ ಪೀಠ ವಿಚಾರಣೆಯನ್ನು ನಾಳೆಗೆ ಮುಂದೂಡಿದರು.