ಬೆಂಗಳೂರು : ಹಿಜಾಬ್ ವಿವಾದ ಕುರಿತು ಹೈಕೋರ್ಟ್ ತೀರ್ಪು ನೀಡಿದ ಬಳಿಕವೂ ರಾಜ್ಯದಲ್ಲಿ ಪ್ರತಿಭಟನೆಗಳು ನಡೆಯುತ್ತಿದ್ದು, ತೀರ್ಪು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಎಚ್ಚರಿಕೆ ನೀಡಿದ್ದಾರೆ.
ಹಿಜಾಬ್ ಇಸ್ಲಾಂ ನ ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ, ಶಾಲಾ-ಕಾಲೇಜುಗಳಲ್ಲಿ ಸರ್ಕಾರದ ಸಮವಸ್ತ್ರ ಆದೇಶ ಕಾನೂನು ಬದ್ಧ ಎಂದು ಹೈಕೋರ್ಟ್ ತ್ರಿಸದಸ್ಯ ಪೀಠ ತೀರ್ಪು ನೀಡಿದ್ದು, ತೀರ್ಪಿನ ವಿರುದ್ಧ ಮುಸ್ಲಿಂ ಸಂಘಟನೆಗಳು ರಾಜ್ಯದಲ್ಲಿ ಬಂದ್ ಗೆ ಕರೆಕೊಟ್ಟು ಪ್ರತಿಭಟನೆ ನಡೆಸಿದ್ದಾರೆ.
ಈ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ಪ್ರತಿಕ್ರಿಯಿಸಿರುವ ಗೃಹ ಸಚಿವರು, ಕೋರ್ಟ್ ಆದೇಶವನ್ನು ಎಲ್ಲರೂ ಪಾಲಿಸಬೇಕು. ತೀರ್ಪು ಪ್ರಕಟವಾದ ಬಳಿಕವೂ ಪ್ರತಿಭಟಿಸುತ್ತಿರುವುದು ಸರಿಯಲ್ಲ ಎಂದರು.
ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಸುಪ್ರೀಂ ಗೆ ಹೋಗಿರುವುದರಲ್ಲಿ ಸಮಸ್ಯೆಯಿಲ್ಲ, ಆದರೆ ಪ್ರತಿಭಟನೆ, ಮತ್ತೆ ವಿವಾದಗಳನ್ನು ಸೃಷ್ಟಿಸಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕೆಡುವಂತೆ ಮಾಡಬಾರದು. ಮಕ್ಕಳಲ್ಲಿ ಮತಾಂಧತೆಯ ಬೀಜ ಬಿತ್ತಬಾರದು. ಕಾನೂನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.