ಬೆಂಗಳೂರು, ಏ.18 : ಯಾವುದೇ ಕಾರಣಕ್ಕೂ ಹುಬ್ಬಳ್ಳಿಯ ಗಲಾಟೆಗೆ ಸಂಬಂಧವಿಲ್ಲದ ಮುಗ್ಧರಿಗೆ ತೊಂದರೆ ಆಗುವುದು ಬೇಡ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ, ಮುಗ್ಧರಿಗೆ ಅನ್ಯಾಯ ಆಗದಿರಲಿ ಎನ್ನುವುದು ನನ್ನ ಮನವಿ. ತಿಳಿಗೇಡಿ ಯುವಕನ ಪ್ರಚೋದನಾತ್ಮಕ ಫೋಸ್ಟ್ನಿಂದ ಹುಬ್ಬಳ್ಳಿಯಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಕಿಡಿಗೇಡಿಗಳ ಜತೆಗೆ ಕೆಲ ಅಮಾಯಕರನ್ನೂ ಪೊಲೀಸರು ಬಂಧಿಸಿರುವ ಬಗ್ಗೆ ನನಗೆ ಮಾಹಿತಿ ಬಂದಿದೆ. ಉದ್ರಿಕ್ತ ಮತಿಗೇಡಿ ಯುವಕರು ಎಸಗಿದ ಕೃತ್ಯಕ್ಕೆ ಸಂಬಂಧವಿಲ್ಲದವರನ್ನೂ ವಶಕ್ಕೆ ಪಡೆಯಲಾಗಿದೆ ಎಂದಿದ್ದಾರೆ.
ಕೆಲ ಕುಟುಂಬಗಳ ತಂದೆ-ತಾಯಂದಿರು ನನಗೆ ನಿರಂತರವಾಗಿ ಮೊಬೈಲ್ ಕರೆ ಮಾಡಿ ಕಣ್ಣೀರು ಹಾಕುತ್ತಿದ್ದಾರೆ. ಈ ಬಗ್ಗೆ ನಾನು ಈಗಾಗಲೇ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರ ಜತೆ ಮಾತನಾಡಿದ್ದು, ಪೊಲೀಸ್ ಠಾಣೆ, ಆಸ್ಪತ್ರೆ, ದೇವಾಲಯದ ಮೇಲೆ ಕಲ್ಲು ಹೊಡೆದವರನ್ನು ಬಿಡಬೇಡಿ. ಆದರೆ, ಅಮಾಯಕರಿಗೆ ತೊಂದರೆ ಕೊಡಬೇಡಿ ಎಂದು ಮನವಿ ಮಾಡಿರುವುದಾಗಿ ಹೇಳಿದ್ದಾರೆ.
ಸಿಸಿ ಕ್ಯಾಮೆರಾ ದೃಶ್ಯಾವಳಿ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಆ ದೃಶ್ಯಗಳಲ್ಲಿ ಇಲ್ಲದವರನ್ನು ಬಿಟ್ಟು ಕಳಿಸಲಾಗುವುದು ಎಂದು ಪೊಲೀಸ್ ಆಯುಕ್ತರು ನನಗೆ ಭರವಸೆ ನೀಡಿದ್ದಾರೆ. ಅಂಜುಮನ್ ಸಂಸ್ಥೆ ಮುಖಂಡರ ಜತೆ ತೆರಳಿ ಪೊಲೀಸರಿಗೆ ಮನವಿ ಕೊಡಿ ಎಂದು ಈಗಾಗಲೇ ನಮ್ಮ ಪಕ್ಷದ ಮುಖಂಡರಿಗೂ ಸೂಚಿಸಿರುವುದಾಗಿ ತಿಳಿಸಿದ್ದಾರೆ.
ಹುಬ್ಬಳ್ಳಿ ಸದಾ ಶಾಂತಿಯನ್ನು ಬಯಸುವ ನಗರ. ಸಾಹಿತ್ಯ, ಸಾಂಸ್ಕøತಿಕ ಪರಂಪರೆಯುಳ್ಳ ತಾಣ. ಕೆಲ ವರ್ಷಗಳಿಂದ ಇಲ್ಲಿ ಎಲ್ಲ ಸಮುದಾಯದವರು ಸಹೋದರರಾಗಿ ಬಾಳಿ ಬದುಕುತ್ತಿದ್ದಾರೆ. ಬವಣೆಯಲ್ಲಿ ಬೇಯುತ್ತಿರುವ ಬದುಕನ್ನು ಕಟ್ಟಿಕೊಳ್ಳುವ ಬದಲು ಕೋಮುದಳ್ಳುರಿ ಹರಡುವುದು ಬೇಡ ಎಂದಿದ್ದಾರೆ.