ಬೆಂಗಳೂರು: ತಮಗೆ ವಿವಿಧ ಇಲಾಖೆಯ ಸಚಿವರನ್ನು ಭೇಟಿಯಾಗಲು ಸಾಧ್ಯವಾಗುತ್ತಿಲ್ಲ ಎಂದು ಕಾಂಗ್ರೆಸ್ ನ 20ಕ್ಕೂ ಹೆಚ್ಚು ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ ಎಂದು ಬಿಜೆಪಿ ಎಂಎಲ್ಸಿ ಎನ್. ರವಿಕುಮಾರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು ಸರ್ಕಾರ ಅಧಿಕಾರಕ್ಕೆ ಬಂದು ಕೇವಲ 2 ತಿಂಗಳೊಳಗೆ ಸಚಿವರನ್ನು ಶಾಸಕರೇ ಭೇಟಿ ಮಾಡಲಾಗದ ಸ್ಥಿತಿ ಎದುರಾಗಿದೆ. ಇನ್ನು ಜನಸಾಮಾನ್ಯರ ಪಾಡೇನು ಎಂದು ಪ್ರಶ್ನಿಸಿದರು. ಕೃಷ್ಣಪ್ಪ, ರಾಯರೆಡ್ಡಿ ಅವರಂತಹ ಹಿರಿಯ ಶಾಸಕರೇ ಈ ಬಗ್ಗೆ ಸಿಎಂ ಪತ್ರ ಬರೆದಿದ್ದಾರೆ. ಇದು ಕಾಂಗ್ರೆಸ್ ಸರ್ಕಾರದ ಜನಸ್ನೇಹಿ ಆಡಳಿತ ಎಂದು ವ್ಯಂಗ್ಯವಾಡಿದರು. ರಾಜ್ಯ ಕಾಂಗ್ರೆಸ್ ಸರ್ಕಾರ ಗ್ಯಾರಂಟಿಯೊಳಗೆ ಮುಳುಗಿ ಹೋಗಿದೆ. ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ನಿಮ್ಮ ಗ್ಯಾರಂಟಿ ಯೋಜನೆ ಹೊರತುಪಡಿಸಿ ರೈತ ಸಮಸ್ಯೆ, ಅಂಗನವಾಡಿ ಕಾರ್ಯಕರ್ತರ ಸಮಸ್ಯೆ ಬಗೆಹರಿಸಿ ಎಂದರು.
ಉಡುಪಿಯಲ್ಲಿ ಶೌಚಾಲಯದಲ್ಲಿ ವಿದ್ಯಾರ್ಥಿನಿಯರು ಮೊಬೈಲ್ ಇರಿಸಿದ್ದ ಪ್ರಕರಣದ ವಿಚಾರವಾಗಿ ಮಾತನಾಡಿದ ಅವರು ಈ ಪ್ರಕರಣದಲ್ಲಿ ಕೂಲಂಕುಷ ತನಿಖೆ ಆಗಬೇಕು. ಯಾರು ವಿಡಿಯೋ ಮಾಡಿದರು, ಅದನ್ನು ಯಾತಕ್ಕೆ ಬಳಸಿಕೊಳ್ಳಬಹುದು ಗೊತ್ತಿಲ್ಲ. ಆದರೆ ವೀಡಿಯೋ ಮಾಡಿದ ಆರೋಪಿಗಳ ವಿರುದ್ಧ ಕ್ರಮ ಆಗಬೇಕು. ವೈದ್ಯಕೀಯ ಶಿಕ್ಷಣ ಸಚಿವರು ಈ ಬಗ್ಗೆ ತನಿಖೆ ಮಾಡಿಸಲಿ ಎಂದು ಒತ್ತಾಯಿಸಿದರು.