ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ಕರ್ನಾಟಕದ ಪೊಲೀಸ್ ಮಹಾನಿರ್ದೇಶಕರಾಗಿ ಅಲೋಕ್ ಮೋಹನ್ ಅವರನ್ನು ನೇಮಿಸಲಾಗಿದೆ.
ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆ ಡಿಜಿಪಿ ಡಾ. ಅಲೋಕ್ ಮೋಹನ್ ಅವರು ಇದೀಗ ಡಿಜಿ-ಐಜಿಪಿಯಾಗಿ ನೇಮಕಗೊಂಡಿದ್ದಾರೆ. ಹಿರಿಯ ಅಧಿಕಾರಿ ಅಲೋಕ್ ಮೋಹನ್ ಅವರನ್ನು ಪೊಲೀಸ್ ಮಹಾನಿರ್ದೇಶಕರ ಸ್ಥಾನಕ್ಕೆ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಅಲೋಕ್ ಮೋಹನ್ 1987ರ ಬ್ಯಾಚ್ನ ಹಿರಿಯ ಐಪಿಎಸ್ ಅಧಿಕಾರಿಯಾಗಿದ್ದಾರೆ. ಈ ಹಿಂದೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿದ್ದ ಪ್ರವೀಣ್ ಸೂದ್ ಚುನಾವಣೆ ಮುಗಿದ ಬೆನ್ನಲ್ಲೇ ಕೇಂದ್ರ ಸರ್ಕಾರದ ಸೇವೆಗೆ ತೆರಳಿದ್ದರು. ಕೇಂದ್ರ ಸರ್ಕಾರ ಅವರನ್ನು ಸಿಬಿಐ ನಿರ್ದೇಶಕರಾಗಿ ನೇಮಕಗೊಳಿಸಿ ಆದೇಶಿಸಿತ್ತು. ಅವರಿಂದ ತೆರವಾದ ಸ್ಥಾನಕ್ಕೆ ಇದೀಗ ಅಲೋಕ್ ಮೋಹನ್ ಬಂದಿದ್ದಾರೆ.