ಬೆಂಗಳೂರು: ಬಿಜೆಪಿ ಶಾಸಕರ ಅಮಾನತು ಖಂಡಿಸಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಸದಸ್ಯರು ವಿಧಾನಸೌಧದ ಬಳಿ ಇರುವ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿ, ಜೆಡಿಎಸ್ ಸದಸ್ಯರ ಜೊತೆ ಸೇರಿ ರಾಜ್ಯಪಾಲರಿಗೆ ದೂರು ಸಲ್ಲಿಸಿದರು.
ರಾಜ್ಯಪಾಲರ ಭೇಟಿಯ ನಂತರ ಮಾಧ್ಯಮಗಳಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸದ್ಯ ಸ್ಪೀಕರ್ ಹುದ್ದೆ ದುರುಪಯೋಗ ಆಗುತ್ತಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಅವಿಶ್ವಾಸ ಮಂಡನೆಗೆ ರಾಜ್ಯಪಾಲರ ಬಳಿ ಮನವಿ ಮಾಡಿರುವುದಾಗಿ ತಿಳಿಸಿದರು.
ಸ್ಪೀಕರ್ ನಮ್ಮನ್ನು ಕರೆದು ಮಾತನಾಡಿಸಿ ಸಮಸ್ಯೆ ಬಗೆ ಹರಿಸಬಹುದಿತ್ತು. ಈ ರೀತಿಯ ಪ್ರಕರಣಗಳು ಹಿಂದೆಯೂ ನಡೆದಿವೆ. ಈ ರೀತಿಯ ತೀರ್ಮಾನ ಯಾರೂ ಮಾಡಿರಲಿಲ್ಲ. ಸ್ಪೀಕರ್ ಆದವರು ರಾಜಕೀಯ ಪಕ್ಷಗಳ ಕಾರ್ಯಕ್ರಮಗಳಲ್ಲಿ ಹಾಜರಾಗಬಾರದು ಅಂತ ಪಾಲಿಸಿಕೊಂಡು ಬರಲಾಗಿದೆ. ಇವರು ಕಾಂಗ್ರೆಸ್ ಪಕ್ಷದ ಔತಣಕೂಟಕ್ಕೆ ಹಾಜರಾಗಿ ಊಟ ಮಾಡಿ ಬಂದಿದ್ದಾರೆ. ಅವರ ಮೇಲೆ ವಿಶ್ವಾಸ ಇಲ್ಲ ಅಂತ ನಾವು ಅವಿಶ್ವಾಸ ಮಂಡನೆಗೆ ಅವಕಾಶ ಕೇಳಿದ್ದೇವೆ. ಈ ಸರ್ಕಾರ ತನ್ನ ತಪ್ಪುಗಳನ್ನು ಮುಚ್ಚಿಕೊಳ್ಳಲು ಈ ರೀತಿ ಮಾಡುತ್ತಿದೆ. ಜನರು ಅವರಿಗೆ ಅಧಿಕಾರ ನೀಡಿದ್ದರೆ ಜನರ ಪರವಾಗಿ ಧ್ವನಿ ಎತ್ತಲು ನಮಗೂ ಅವಕಾಶ ಕೊಟ್ಟಿದ್ದಾರೆ ಎಂದು ಹೇಳಿದರು.