ಬೆಂಗಳೂರು: ಅಡಿಕೆ ಎಲೆ ಚುಕ್ಕೆ ರೋಗ ನಿಯಂತ್ರಣಕ್ಕೆ, ರಾಜ್ಯ ಸರಕಾರ ಒಟ್ಟು ಎಂಟು ಕೋಟಿ ರೂ.ಗಳಷ್ಟು ಅನುದಾನ ನಿಗದಿಮಾಡಿ, ನಾಲ್ಕು ಕೋಟಿ ರೂಪಾಯಿಗಳನ್ನು, ತಕ್ಷಣಕ್ಕೆ ರೈತರಿಗೆ ವಿತರಿಸಲು, ಬಿಡುಗಡೆ ಮಾಡಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ರಾಜ್ಯದ ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಮತ್ತು ಕೊಡಗು, ಹಾಸನ ಜಿಲ್ಲೆಯಲ್ಲಿ ಒಟ್ಟು ಇಪ್ಪತ್ತು ಸಾವಿರ ಹೆಕ್ಟೇರ್ ಅಡಿಕೆ ಬೆಳೆ ಪ್ರದೇಶದಲ್ಲಿ ಎಲೆ ಚುಕ್ಕೆ ರೋಗ ಹಬ್ಬಿದ್ದು, ಇದರ ನಿಯಂತ್ರಣ ಬಗ್ಗೆ, ತೋಟಗಾರಿಕೆ ಇಲಾಖೆ ಔಷದಿ ಹಾಗೂ ಸಿಂಪರಣೆ ವೆಚ್ಚ ಭರಿಸಲು ಅನುದಾನ ಬಿಡುಗಡೆ ಗೊಳಿಸಿದ್ದು, ರೈತ ಬಾಂಧವರು ಇದರ ಸದುಪಯೋಗ ಪಡೆಯಬೇಕು ಎಂದು ಹೇಳಿದರು.
ರೋಗ ನಿಯಂತ್ರಣಕ್ಕೆ, ಉತ್ತಮ ಗುಣ ಮಟ್ಟದ ಸಸ್ಯ ಸಂರಕ್ಷಣೆ ಔಷಧ ಕೊಳ್ಳಲು, ಪ್ರತಿ ಹೆಕ್ಟೇರ್ ಗೆ, 4000 ರೂಪಾಯಿ ಅನುದಾನವನ್ನು, ಮೊದಲ ಸಿಂಪರಣೆಗಾಗಿ 1.5 ಹೆಕ್ಟೇರ್ ತೋಟಗಾರಿಕಾ ಪ್ರದೇಶ ಮಿತಿಗೊಳಪಟ್ಟು ರೈತರಿಗೆ, ಅನುದಾನ ಒದಗಿಸಲಾಗುವುದು.