ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಸೋಮವಾರ ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ವಿಧಾನಸಭೆಯ ವಿರೋಧ ಪಕ್ಷದ ನಾಯಕರ ನೇಮಕದ ಕುರಿತು ಅಮಿತ್ ಶಾ ಅವರೊಂದಿಗೆ ಚರ್ಚೆ ನಡೆಸುವ ಸಾಧ್ಯತೆ ಇದೆ.
ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಬೊಮ್ಮಾಯಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸೂಚಿಸಿದ್ದು, ಈ ನಿಟ್ಟಿನಲ್ಲಿ ಭೇಟಿ ಮಹತ್ವ ಪಡೆದುಕೊಂಡಿದೆ. ಬಿಜೆಪಿಯ ಎಲ್ಲಾ 66 ಶಾಸಕರು ವಿರೋಧ ಪಕ್ಷದ ನಾಯಕರಾಗಿದ್ದು, ರಾಜ್ಯ ಸರ್ಕಾರ ಎಚ್ಚರಿಕೆಯಿಂದ ನಡೆಯಬೇಕು ಎಂದು ಬೊಮ್ಮಾಯಿ ಇತ್ತೀಚೆಗೆ ಹೇಳಿಕೆ ನೀಡಿದ್ದನ್ನು ಗಮನಿಸಬಹುದು.
ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲಿನ ನಂತರ ಬಿಜೆಪಿ ಹೈಕಮಾಂಡ್ ಕರ್ನಾಟಕ ನಾಯಕತ್ವದ ವಿರುದ್ಧ ಅಸಮಾಧಾನಗೊಂಡಿದೆ. ಬಿಜೆಪಿಯಲ್ಲಿನ ಆಂತರಿಕ ಕಚ್ಚಾಟದಿಂದ ಪ್ರಧಾನಿ ನರೇಂದ್ರ ಮೋದಿ ಮತ್ತು ಶಾ ಬೇಸರಗೊಂಡಿದ್ದು, ರಾಜ್ಯ ರಾಜಕಾರಣದ ಕುರಿತು ಆಸಕ್ತಿ ಕಳೆದುಕೊಂಡಿದ್ದಾರೆ ಎನ್ನಲಾಗಿದೆ.
ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹಾಗೂ ಇತರರೊಂದಿಗೆ ಹೈಕಮಾಂಡ್ ಮಾತನಾಡಿದ್ದು, ಬಿಜೆಪಿ ಶಾಸಕರಾದ ಸುರೇಶ್ ಕುಮಾರ್ (ಬ್ರಾಹ್ಮಣ), ವಿ.ಸುನೀಲ್ ಕುಮಾರ್ (ಒಬಿಸಿ), ಡಾ.ಸಿ.ಎನ್. ಅಶ್ವಥ್ ನಾರಾಯಣ (ಒಕ್ಕಲಿಗ), ಆರ್.ಅಶೋಕ ( ಒಕ್ಕಲಿಗ), ಅರವಿಂದ್ ಬೆಲ್ಲದ್ (ಲಿಂಗಾಯತ) ಅವರನ್ನೂ ಸ್ಥಾನಕ್ಕೆ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಪರಿಗಣಿಸಲಾಗಿದೆ. ಯತ್ನಾಳ್ ಅವರು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅಧಿಕಾರದಿಂದ ಕೆಳಗಿಳಿಯಲು ಕಾರಣವಾಗಿದ್ದು, ಇದೇ ಕಾರಣಕ್ಕೆ ಯತ್ನಾಳ್ ಅವರಿಗೆ ಅಧಿಕಾರ ನೀಡುವುದನ್ನು ವಿರೋಧಿಸುತ್ತಿದ್ದಾರೆ.