ಬೆಂಗಳೂರು: ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡ ಎಲ್ಲರಿಗೂ ನನ್ನ ನಮನಗಳನ್ನು ಸಲ್ಲಿಸುತ್ತೇನೆ. ಈ ಸ್ವಾತಂತ್ರ್ಯ ದಿನವನ್ನು ಸ್ವಾತಂತ್ರ್ಯಕ್ಕಾಗಿ ಹೋರಾಡಿ ತ್ಯಾಗ ಬಲಿದಾನಗೈದ ಹಲವಾರು ಅನಾಮಧೇಯ ಹೋರಾಟಗಾರರಿಗೆ ಈ ದಿನವನ್ನು ಅರ್ಪಿಸುತ್ತೇನೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.
1857ರಲ್ಲಿ ನಡೆದ ಘಟನೆಯನ್ನು ನಾವು ಪ್ರಥಮ ಸ್ವಾತಂತ್ರ್ಯ ದಂಗೆ ಎಂದು ಕರೆಯುತ್ತೇವೆ. ಆದರೇ ಅದಕ್ಕೂ ಮುಂಚೆ 1824ರಲ್ಲಿಯೇ ಕನ್ನಡತಿ ಕಿತ್ತೂರು ರಾಣಿ ಚೆನ್ನಮ್ಮ, ಅವರ ಬಂಟ ಸಂಗೊಳ್ಳಿ ರಾಯಣ್ಣ ಬ್ರಿಟಿಷರಿಗೆ ಸೋಲಿನ ರುಚಿ ತೋರಿಸಿದ ಮೊದಲಿಗರಾಗಿದ್ದರು ಎಂದು ಸ್ಮರಿಸಿದರು.
ಈ ದೇಶವನ್ನು ಕಟ್ಟಲು ಕೂಲಿ ಕಾರ್ಮಿಕರಿಂದ ಹಿಡಿದು ದೊಡ್ಡ ದೊಡ್ಡ ಕೈಗಾರಿಕೋದ್ಯಮಿಗಳ ತನಕ ಎಲ್ಲರೂ ತಮ್ಮ ತಮ್ಮ ಕೊಡುಗೆ ನೀಡಿ, ದೇಶವನ್ನು ಕಟ್ಟಿದ್ದಾರೆ. ಈ ದೇಶವನ್ನು ಕಟ್ಟಲು ನಮ್ಮ ಸುದೈವವೆಂಬಂತೆ ಶ್ರೀ ನರೇಂದ್ರ ಮೋದಿ ಅವರ ನಾಯಕತ್ವ ದೊರೆತಿದೆ. ಎಂಟು ವರ್ಷಗಳಲ್ಲಿ ಹಲವಾರು ಅಡೆತಡೆಗಳನ್ನು ಎದುರಿಸಿದರೂ, ದೇಶ ಹಲವಾರು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸುತ್ತಾ, ಇಡೀ ಜಗತ್ತಿಗೆ ಮಾದರಿಯಾಗಿದ್ದೇವೆ ಎಂದರು.
ಕರ್ನಾಟಕ ದೇಶದಲ್ಲಿಯೇ ವಿಶಿಷ್ಟವಾದ ರಾಜ್ಯವಾಗಿದೆ. ಎಲ್ಲ ತರಹದ ಸಂಪನ್ಮೂಲಗಳು ಹೇರಳವಾಗಿವೆ. ಹಲವಾರು ಕ್ಷೇತ್ರಗಳಲ್ಲಿ ಕರ್ನಾಟಕ ರಾಜ್ಯ ನಂಬರ್ 1 ಆಗಿದೆ. ದೇಶದ ಜಿ.ಡಿ.ಪಿ ಯಲ್ಲಿ ಶೇ.9ರಷ್ಟು ಕೊಡುಗೆ ನಮ್ಮದಾಗಿದೆ. ದೇಶದ ಸ್ವಾವಲಂಬನೆಗೆ ರೈತರ ಕೊಡುಗೆ ದೊಡ್ಡದು. ವಿಜ್ಞಾನಿಗಳು, ರೈತರು, ಕೂಲಿಕಾರ್ಮಿಕರಿಗೆ ನಮನಗಳನ್ನು ಅರ್ಪಿಸಿದರು. ಜೊತೆಗೆ ದೇಶಕ್ಕಾಗಿ ಗಡಿಯಲ್ಲಿ ಚಳಿ, ಮಳೆ, ಗಾಳಿಗೆ ಜಗ್ಗದೆ ಕಾಯುತ್ತಿರುವ ಯೋಧರ ಕರ್ತವ್ಯ ತತ್ಪರತೆಯನ್ನು ಸ್ಮರಿಸಿದರು.
"ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡ ಎಲ್ಲರಿಗೂ ನನ್ನ ನಮನಗಳನ್ನು ಸಲ್ಲಿಸುತ್ತೇನೆ. ಈ ಸ್ವಾತಂತ್ರ್ಯ ದಿನವನ್ನು ಸ್ವಾತಂತ್ರ್ಯಕ್ಕಾಗಿ ಹೋರಾಡಿ ತ್ಯಾಗ ಬಲಿದಾನಗೈದ ಹಲವಾರು ಅನಾಮಧೇಯ ಹೋರಾಟಗಾರರಿಗೆ ಈ ದಿನವನ್ನು ಅರ್ಪಿಸುತ್ತೇನೆ*: ಮುಖ್ಯಮಂತ್ರಿ @BSBommai #ಸ್ವಾತಂತ್ರ್ಯದಿನ
— CM of Karnataka (@CMofKarnataka) August 15, 2022