ಬೆಂಗಳೂರು: ಆದಾಯಕ್ಕಿಂತ ಹೆಚ್ಚು ವ್ಯಯವಿದ್ದ ಕಡೆ ಪರಿಹಾರ ನೀಡಲು ಸಾಧ್ಯವಿಲ್ಲ. ಆದಷ್ಟು ಮಟ್ಟಿಗೆ ಸಹಕಾರ ಸಂಸ್ಥೆಗಳು ಗ್ರಾಹಕರ ಹಿತರಕ್ಷಣೆ ಕಾಪಾಡಬೇಕೆಂದು ಕೇಂದ್ರ ಗೃಹ ಹಾಗೂ ಸಹಕಾರ ಸಚಿವರಾದ ಅಮಿತ್ ಷಾ ತಿಳಿಸಿದರು.
ಮಲ್ಲೇಶ್ವರದ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತದಲ್ಲಿ ರಾಜ್ಯದ ಸೌಹಾರ್ದ ಸಹಕಾರಿಗಳೊಂದಿಗೆ ಸಂವಾದ ನಡೆಸಿ ಮಾತನಾಡಿ, ರಾಜ್ಯದೆಲ್ಲೆಡೆ ಹೊಸದಾಗಿ ಸಹಕಾರ ಸಂಸ್ಥೆಗಳನ್ನು ಪ್ರಾರಂಭಿಸುವುದರ ಬದಲಿಗೆ ಇರುವ ಸಂಸ್ಥೆಗಳನ್ನೂ ಪುನರುಜ್ಜೀವನಗೊಳಿಸಿ ಯಶಸ್ವಿಯಾಗಿ ನಡೆಸಿಕೊಂಡು ಹೋಗಬೇಕಿದೆ. ಇದರಲ್ಲಿ ಯಶಸ್ಸು ಕಂಡರೆ ಮುಂದಿನ ದಿನಗಳಲ್ಲಿ ಪದಾಧಿಕಾರಿಗಳು ಚುನಾವಣೆ ಎದುರಿಸಿ ಮೇಲ್ಮಟ್ಟಕ್ಕೆ ಬರಲು ಸಾಧ್ಯವಾಗುತ್ತದೆ ಎಂದರು
ಸೌಹಾರ್ದ ಸಹಕಾರಿಗಳು ಸಹಕಾರಿ ಆದಾಯ ತೆರಿಗೆ ಸಡಿಲಿಕೆ ಮುಂತಾದ ವಿಷಯಗಳಿಗೆ ಸಂಬಂಧಿಸಿದಂತೆ ಅಮಿತ್ ಶಾ ಅವರಿಗೆ ಎರಡು ಮನವಿ ಪತ್ರಗಳನ್ನು ಸಲ್ಲಿಸಿದರು. ಅಲ್ಲದೆ ಸಹಕಾರಿ ನಿಯಮಿತಕ್ಕೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಪದಾಧಿಕಾರಿಗಳು ಬೆಳಕು ಚೆಲ್ಲಿದರು. ಬೆಂಗಳೂರಿದ ಗುರುರಾಘವೇಂದ್ರ ಕೋಆಪರೇಟಿವ್ ಬ್ಯಾಂಕ್ ಅವ್ಯವಹಾರ ಹಾಗೂ ಗ್ರಾಹಕರಿಗೆ ಆಗಿರುವ ನಷ್ಟದ ಬಗ್ಗೆ ಸಹ ಚರ್ಚೆ ನಡೆಯಿತು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಷಿ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್, ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ, ಗೃಹ ಸಚಿವ ಅರಗ ಜ್ಞಾನೇಂದ್ರ, ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್.ಅಶ್ವತ್ಥ ನಾರಾಯಣ sಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್, ಸಂಸದ ಡಿ.ವಿ.ಸದಾನಂದಗೌಡ, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ ಅಧ್ಯಕ್ಷರಾದ ಜಿ.ನಂಜನಗೌಡ ಹಾಗೂ ಸಹಕಾರಿ ಪ್ರತಿನಿಧಿಗಳು ಉಪಸ್ಥಿತರಿದ್ದರು.