ಬೆಂಗಳೂರು: ಸಾರಿಗೆ ಸಚಿವರ ನಿರ್ಲಕ್ಷ್ಯ ಹಾಗೂ ಇಲಾಖೆಯಲ್ಲಿ ನಡೆಯುತ್ತಿರುವ ಅಕ್ರಮಗಳಿಂದಾಗಿ ರಾಜ್ಯದಲ್ಲಿ ಸಾರಿಗೆ ನೌಕರರ ಆತ್ಮಹತ್ಯೆ ಪ್ರಕರಣಗಳು ಏರಿಕೆಯಾಗುತ್ತಿವೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ 35ಕ್ಕೂ ಹೆಚ್ಚು ಸಾರಿಗೆ ನೌಕರರು ಆತ್ಮಹತ್ಯೆ ಮಾಡಿಕೊಂಡಿದ್ದು, ಕಳೆದ ಕೇವಲ 15 ದಿನಗಳಲ್ಲಿ ಆರು ಸಾರಿಗೆ ನೌಕರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನೌಕರರಾದ ಹೊಳೆಬಸಪ್ಪ, ರಾಜ್ಕುಮಾರ್, ಬಸವರಾಜ್, ಈಶಣ್ಣ, ಭೀಮಾಶಂಕರ್ರವರು ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು.
ಹೀಗೆ ಸಾಲುಸಾಲು ನೌಕರರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರೂ ಸಚಿವರು ಹಾಗೂ ಅಧಿಕಾರಿಗಳು ನೌಕರರ ಶವ ನೋಡಲು ಹಾಗೂ ಅವರ ಕುಟುಂಬಕ್ಕೆ ಸಾಂತ್ವನ ಹೇಳಲು ಕೂಡ ತೆರಳದಿರುವುದು ನಿಜಕ್ಕೂ ಅಮಾನವೀಯ. ಆತ್ಮಹತ್ಯೆಗಳನ್ನು ಖಂಡಿಸಿ ಆಮ್ ಆದ್ಮಿ ಪಾರ್ಟಿಯು ಪ್ರತಿಭಟನೆ ಮಾಡಿದ ನಂತರ ಸರ್ಕಾರವು ಡಿಪೋ ಮ್ಯಾನೇಜರ್ರೊಬ್ಬರನ್ನು ಅಮಾನತು ಮಾಡಿ ಸುಮ್ಮನಾಗಿದೆ. ಸಂತ್ರಸ್ತರಿಗೆ ಸೂಕ್ತ ಪರಿಹಾರ ಕೊಡಿಸಲು ಕೂಡ ಸಾರಿಗೆ ಸಚಿವರಿಗೆ ಸಾಧ್ಯವಾಗದಿರುವುದು ದುರಂತ.
2020 ಹಾಗೂ 2021ರಲ್ಲಿ ಕೋವಿಡ್ನಿಂದಾಗಿ 110ಕ್ಕೂ ಹೆಚ್ಚು ಸಾರಿಗೆ ನೌಕರರು ಬಲಿಯಾಗಿದ್ದಾರೆ. ಇವರ ಕುಟುಂಬಗಳಿಗೆ 30 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ರಾಜ್ಯ ಸರ್ಕಾರ ಘೋಷಿಸಿತ್ತಾದರೂ ಈವರೆಗೆ ಕೇವಲ ಏಳು ಕುಟುಂಬಗಳಿಗೆ ಮಾತ್ರ ಪರಿಹಾರ ದೊರೆತಿದೆ. ಸಾರಿಗೆ ಸಚಿವ ಶ್ರೀರಾಮುಲುರವರು ಕೋವಿಡ್ ಪರಿಹಾರ ದೊರಕಿಸಿಕೊಡುವುದರಲ್ಲೂ ವಿಫಲರಾಗಿರುವುದು ಇದರಿಂದ ಸ್ಪಷ್ಟವಾಗುತ್ತದೆ.
ಆದ್ದರಿಂದ ತಾವುಗಳು ಸಚಿವ ಶ್ರೀರಾಮುಲುರವನ್ನು ತಕ್ಷವೇ ಸಂಪುಟದಿಂದ ವಜಾ ಮಾಡಿ, ಯೋಗ್ಯ ವ್ಯಕ್ತಿಗೆ ಸಾರಿಗೆ ಸಚಿವ ಸ್ಥಾನವನ್ನು ನೀಡಬೇಕು. ಸಾರಿಗೆ ನೌಕರರ ಹಿತ ಕಾಪಾಡುವಂತಹ ಸಾರಿಗೆ ನೀತಿ ರೂಪಿಸಲು ತಜ್ಞರ ಸಮಿತಿ ರಚಿಸಬೇಕು ಎಂದು ಆಮ್ ಆದ್ಮಿ ಪಾರ್ಟಿಯು ಈ ಮೂಲಕ ಮನವಿ ಮಾಡುತ್ತಿದೆ.