ಬೆಂಗಳೂರು: ಇಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಿಂದ ಸ್ಪರ್ಧಿಸ ಬೇಕು ಎಂಬ ಒತ್ತಡದ ಹಿನ್ನೆಲೆಯಲ್ಲಿ ಕೋಲಾರ ಪ್ರವೇಶಿಸಲಿದ್ದಾರೆ.
ಮಾಜಿ ಮುಖ್ಯಮಂತ್ರಿ ಭೇಟಿ ವೇಳೆ ನಗರದ ಶಕ್ತಿ ದೇವತೆ ಕೋಲಾರಮ್ಮ ದೇವಾಲಯದಲ್ಲಿ ಪೂಜೆ, ಚರ್ಚ್ ಮತ್ತು ಮಸೀದಿಗೆ ಭೇಟಿ, ಮಹಾತ್ಮಾ ಗಾಂಧಿ, ಸಂವಿಧಾನಶಿಲ್ಪಿ ಡಾ| ಬಾಬಾ ಸಾಹೇಬ್ ಅಂಬೇಡ್ಕರ್, ವಾಲ್ಮೀಕಿ, ಕನಕದಾಸ, ಯೋಗಿ ನಾರಾಯಣ ಯತೀಂದ್ರರ ಪ್ರತಿಮೆಗೆ ಮಾಲಾರ್ಪಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಸೀತಿ ಬೆಟ್ಟದ ಭೈರವೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಏರ್ಪಡಿಸಲಾಗಿದೆ. ದಿ| ಬೈರೇಗೌಡರ ಸಮಾಧಿ ಸ್ಥಳಕ್ಕೆ ಭೇಟಿ ಕಾರ್ಯಕ್ರಮ ನಿಗದಿಯಾಗಿದೆ. ನಂತರ ಮಾಜಿ ಸಚಿವ ಕೃಷ್ಣ ಬೈರೇಗೌಡರ ತೋಟದ ಮನೆಯಲ್ಲಿ ಪ್ರಮುಖ ಮುಖಂಡರ ಸಭೆ ನಡೆಸಲಿದ್ದಾರೆ.
ಸಿದ್ದರಾಮಯ್ಯ ಅವರ ಕೋಲಾರ ಭೇಟಿ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದ್ದು, ಮುಂದಿನ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವ ಮುನ್ಸೂಚನೆ ಎನ್ನಲಾಗುತ್ತಿದೆ.