ಬೆಂಗಳೂರು: ಬಡವರಿಗೆ ಮೀಸಲಾಗಿರುವ ಅಕ್ಕಿಯನ್ನು ಗೋವಾ ಮತ್ತು ಮಹಾರಾಷ್ಟ್ರಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿದೆ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ಕರ್ನಾಟಕ ಘಟಕ ಆರೋಪಿಸಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಎಎಪಿ ಮುಖಂಡ ಹಾಗೂ ಹಿರಿಯ ವಕೀಲ ಬ್ರಿಜೇಶ್ ಕಾಳಪ್ಪ, ಬಡವರಿಗೆ ಸೇರಿದ ಅನ್ನಭಾಗ್ಯ ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ. ಗೋವಾ ಮತ್ತು ಮಹಾರಾಷ್ಟ್ರದಂತಹ ನೆರೆಯ ರಾಜ್ಯಗಳಿಗೆ ಟನ್ ಗಟ್ಟಲೆ ಅನ್ನಭಾಗ್ಯ ಅಕ್ಕಿಯನ್ನು ಕಳ್ಳಸಾಗಣೆ ಮಾಡಲಾಗುತ್ತಿದೆ.
ಸರ್ಕಾರ ತ್ವರಿತವಾಗಿ ಅಕ್ರಮಗಳನ್ನು ತಡೆಯದಿದ್ದರೆ, ಪ್ರತಿಭಟನೆಗಳನ್ನು ಪ್ರಾರಂಭಿಸಲಾಗುವುದು ಎಂದು ಅವರು ಹೇಳಿದರು.
“ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವ ಬದಲು, ಸರ್ಕಾರವು ಶೇಕಡಾ 40 ರಷ್ಟು ಕಮಿಷನ್ ತೆಗೆದುಕೊಂಡ ನಂತರ ಮೌನವಾಗಿದೆ. ಕಮಿಷನ್ ಗಾಗಿ ಸರ್ಕಾರದ ದುರಾಸೆಯಿಂದಾಗಿ ಬಡವರು ತೊಂದರೆ ಅನುಭವಿಸುತ್ತಿದ್ದಾರೆ. ಇದು ಜನವಿರೋಧಿ ಮತ್ತು ಭ್ರಷ್ಟ ಸರ್ಕಾರವಾಗಿದ್ದು, ಹಣಕ್ಕಾಗಿ ಜನರ ಹಿತಾಸಕ್ತಿಯನ್ನು ಬಲಿಕೊಡುತ್ತಿದೆ” ಎಂದು ಅವರು ಆರೋಪಿಸಿದರು.
ಕಳೆದ ಮೂರು ವರ್ಷಗಳಲ್ಲಿ ಅನ್ನಭಾಗ್ಯ ಯೋಜನೆಯಡಿ ಪಡಿತರವನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 800 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.
2020-21ರಲ್ಲಿ 65, 2021-22ರಲ್ಲಿ 472 ಮತ್ತು 2022-23ರಲ್ಲಿ 300ಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿವೆ. ಇಷ್ಟು ದೊಡ್ಡ ಸಂಖ್ಯೆಯ ಪ್ರಕರಣಗಳು ದಾಖಲಾಗಿದ್ದರೂ, ಅಕ್ರಮಗಳನ್ನು ತಡೆಯಲು ಸರ್ಕಾರವು ವ್ಯವಸ್ಥೆಯಲ್ಲಿ ಯಾವುದೇ ಬದಲಾವಣೆಗಳನ್ನು ತಂದಿಲ್ಲ” ಎಂದು ಬ್ರಿಜೇಶ್ ಕಾಳಪ್ಪ ಹೇಳಿದರು.
ಪಡಿತರ ಕಳ್ಳಸಾಗಣೆದಾರರೊಂದಿಗೆ ಸರ್ಕಾರದ ಪಿತೂರಿಯಿಂದಾಗಿ ಕರ್ನಾಟಕದಲ್ಲಿ ಅಪೌಷ್ಟಿಕತೆ ಮತ್ತು ಶಿಶು ಮರಣ ಪ್ರಮಾಣ ಹೆಚ್ಚಾಗುತ್ತಿದೆ ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಕಾರ, ರಾಜ್ಯದಲ್ಲಿ 11,961 ಮಕ್ಕಳು ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು 3,64,614 ಮಕ್ಕಳು ಮಧ್ಯಮ ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ.