ಬೆಂಗಳೂರು: ನವೆಂಬರ್ 11ರಂದು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಕೆಐಎ) 108 ಅಡಿ ಎತ್ತರದ ಕೆಂಪೇಗೌಡರ ಕಂಚಿನ ಪುತ್ಥಳಿಯನ್ನು ಪ್ರಧಾನಿ ನರೇಂದ್ರ ಮೋದಿ ಅನಾವರಣಗೊಳಿಸಲಿದ್ದಾರೆ.
ಈ ಹಿನ್ನೆಲೆಯಲ್ಲಿ ಶುಕ್ರವಾರ ಹಮ್ಮಿಕೊಂಡಿರುವ ಪವಿತ್ರ ಮೃತ್ತಿಕಾ ಸಂಗ್ರಹ ಅಭಿಯಾನದ ಚಾಲನಾ ಸಮಾರಂಭಕ್ಕೆ ಮಾಜಿ ಮುಖ್ಯಮಂತ್ರಿಗಳಾದ ಎಸ್ ಎಂ ಕೃಷ್ಣ ಮತ್ತು ಬಿ ಎಸ್ ಯಡಿಯೂರಪ್ಪ ಅವರನ್ನು ಆಹ್ವಾನಿಸಲಾಗಿದೆ.
ಗುರುವಾರ ಈ ಹಿರಿಯ ನಾಯಕರ ಮನೆಗೆ ತೆರಳಿದ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಅವರು ಸರಕಾರದ ಪರವಾಗಿ ಇಬ್ಬರನ್ನೂ ಆಮಂತ್ರಿಸಿದರು.
ಈ ಸಂದರ್ಭದಲ್ಲಿ ಅವರು ಈ ಹಿರಿಯ ಮುತ್ಸದ್ದಿಗಳಿಗೆ ಕಾರ್ಯಕ್ರಮದ ರೂಪುರೇಷೆ ಇತ್ಯಾದಿಗಳನ್ನು ವಿವರಿಸಿದರು.