ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಯನ್ನು ವಾಪಸ್ ಪಡೆಯುವ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ ಗುರುವಾರ ಅನುಮೋದನೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಯಿತು. ಈ ವಿಚಾರವಾಗಿ ಸಚಿವ ಸಂಪುಟ ಸಭೆಯ ಬಳಿಕ ಸಚಿವ ಹೆಚ್ಕೆ ಪಾಟೀಲ್ ಮಾಧ್ಯಮಗಳಿಗೆ ಮಾಹಿತಿ ನೀಡಿದರು.
ಡಿಕೆ ಶಿವಕುಮಾರ್ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಎಜಿ ಆಗಿದ್ದ ಪ್ರಭುಲಿಂಗ ನಾವದಗಿ ವರದಿ ಆಧರಿಸಿ ಹಾಲಿ ಎಜಿಯಿಂದ ಅಭಿಪ್ರಾಯ ಪಡೆಯಲಾಗಿತ್ತು. ಸಿಬಿಐ ತನಿಖೆಗೆ ನೀಡುವಂತಹ ಪ್ರಕರಣ ಇದಲ್ಲವೆಂದು ಅಂದಿನ ಎಜಿ ವಿರೋಧಿಸಿದ್ದರು. ಅದನ್ನು ಕಡೆಗಣಿಸಿ ಅಂದಿನ ಬಿಜೆಪಿ ಸರ್ಕಾರ ಸಿಬಿಐ ತನಿಖೆಗೆ ಅನುಮೋದನೆ ನೀಡಿತ್ತು. ಹಿಂದಿನ ಎಜಿ ವರದಿ ಅಸ್ತ್ರವಾಗಿಟ್ಟುಕೊಂಡು ಅಭಿಪ್ರಾಯ ಸಲ್ಲಿಸಿರುವ ಹಾಲಿ ಎಜಿ ಜನರಲ್ ಶಶಿಕಿರಣ್ ಶೆಟ್ಟಿ ಅಭಿಪ್ರಾಯ ಸಲ್ಲಿಸಿದ್ದರು.