ಬೆಂಗಳೂರು: 224 ವಿಧಾನಸಭಾ ಕ್ಷೇತ್ರಗಳಿಗೆ ಈಗಾಗಲೇ 124 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿರುವ ಕರ್ನಾಟಕ ಕಾಂಗ್ರೆಸ್ ಘಟಕ, ಸೋಮವಾರ ಕೇಂದ್ರ ಕಚೇರಿಯಲ್ಲಿ ನಡೆಯುವ ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಅಂತಿಮಗೊಳಿಸಲು ಸಜ್ಜಾಗಿದೆ.
ಸಭೆಯಲ್ಲಿ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಇತರ ಹಿರಿಯ ನಾಯಕರು ಪಾಲ್ಗೊಳ್ಳಲಿದ್ದಾರೆ.
ಕೆಲ ಕ್ಷೇತ್ರಗಳಿಗೆ ಪ್ರಬಲ ಅಭ್ಯರ್ಥಿಗಳು ಟಿಕೆಟ್ ಆಕಾಂಕ್ಷಿಗಳಾಗಿರುವುದರಿಂದ 30 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ನಿರ್ಣಾಯಕವಾಗಿದೆ ಎಂಬುದು ಪಕ್ಷದ ಒಳಗಿನವರ ಅಭಿಪ್ರಾಯ. ಟಿಕೆಟ್ ಹಂಚಿಕೆ ವಿಚಾರವಾಗಿ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ ಇದ್ದು, ಬಿಜೆಪಿಗೆ ಯಾವುದೇ ಲಾಭವಾಗದಂತೆ ಮುಖಂಡರು ಅಭ್ಯರ್ಥಿಗಳನ್ನು ಸೂಕ್ಷ್ಮವಾಗಿ ಪರಿಗಣಿಸುತ್ತಿದ್ದಾರೆ. ಪಕ್ಷವು ಉಳಿದ 100 ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಬೇಕಾಗಿದೆ.