ಬೆಂಗಳೂರು: ಕೋವಿಡ್ ಸೋಂಕಿನಿಂದ ಮೃತಪಟ್ಟ ವ್ಯಕ್ತಿಗಳ ಕುಟುಂಬಳಿಗೆ ಪರಿಹಾರ ಸಲ್ಲಿಕೆಗೆ ಜೂ. 30 ರವರೆಗೆ ಅವಧಿ ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ. ಈ ಮೊದಲು ಪರಿಹಾರಕ್ಕೆ ಅರ್ಜಿ ಸಲ್ಲಿಸಲು 2022ರ ಮಾ.20 ಕೊನೇ ದಿನ ಎಂದು ಸೂಚಿಸಲಾಗಿತ್ತು.
ಕರೊನಾದಿಂದ ಮೃತಪಟ್ಟ ವ್ಯಕ್ತಿಗಳ ಕುಟುಂಬಕ್ಕೆ ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ವಯ ತಲಾ 50,000 ರೂಪಾಯಿ ಪರಿಹಾರ ಧನ ವಿತರಿಸಲಾಗುತ್ತಿದೆ. ಕೋವಿಡ್ನಿಂದಾಗಿ ಸಾವು ದೃಢಪಟ್ಟಿದ್ದು, ಆರೋಗ್ಯ ಇಲಾಖೆಯ ದತ್ತಾಂಶದಲ್ಲಿ ಲಭ್ಯವಿಲ್ಲದ ಪ್ರಕರಣಗಳನ್ನು ಅಪರ ಜಿಲ್ಲಾಧಿಕಾರಿಗಳು/ಬಿಬಿಎಂಪಿ ಜಂಟಿ ಆಯುಕ್ತರ ಅಧ್ಯಕ್ಷತೆಯಲ್ಲಿ ರಚಿಸಲಾದ ಕುಂದು-ಕೊರತೆ ನಿವಾರಣಾ ಸಮಿತಿಯಲ್ಲಿ ತೀರ್ಮಾನಿಸಿ ಸ್ಟೇಟ್ ಕೋವಿಡ್ ವಾರ್ ರೂಂ ಲೈನ್ ಲಿಸ್ಟ್ನಲ್ಲಿ ಸೇರ್ಪಡೆಗೊಳಿಸಿ ಎಸ್ಡಿಆರ್ಎಫ್ ಮಾರ್ಗಸೂಚಿಯನ್ವಯ ಪರಿಹಾರ ಪಾವತಿಸಲು ಸರ್ಕಾರ ಆದೇಶಿಸಿದೆ.
ಸುಪ್ರೀಂ ಕೋರ್ಟ್ನ ಆದೇಶದಲ್ಲಿ ಕೋವಿಡ್ನಿಂದ ಮೃತಪಟ್ಟ ವ್ಯಕ್ತಿಗಳ ಕಾನೂನುಬದ್ಧ ವಾರಸುದಾರರಿಗೆ ಪರಿಹಾರ ನೀಡಲು ಅರ್ಜಿ ಸ್ವೀಕಾರ ಹಾಗೂ ಅರ್ಹ ವ್ಯಕ್ತಿಗಳಿಗೆ ಪರಿಹಾರ ಪಾವತಿಸುವ ಕುರಿತು ನಿರ್ದೇಶನಗಳನ್ನು ನೀಡಲಾಗಿದೆ. ಇವುಗಳನ್ನು ಕಟ್ಟುನಿಟ್ಮಾಗಿ ಪಾಲಿಸುವಂತೆ ಹಾಗೂ ಅರ್ಜಿ ಸ್ವೀಕೃತಿಗೆ ಕಾಲಮಿತಿ ನಿಗದಿಪಡಿಸಲಾಗಿದೆ. ಆದರೆ, ಜಿಲ್ಲೆಗಳಿಂದ ಸ್ವೀಕೃತವಾದ ಕೋರಿಕೆಯ ಮೇರೆಗೆ ಗಡುವು ವಿಸ್ತರಿಸಿ ಸರ್ಕಾರ ಸುತ್ತೋಲೆ ಹೊರಡಿಸಿದೆ.