ಬೆಂಗಳೂರು: ಸರ್ಕಾರಿ ಅಧಿಕಾರಿಗಳನ್ನೇ ಗುರಿಯಾಗಿಸಿಕೊಂಡು ಕ್ರಿಮಿನಲ್ ಕೃತ್ಯಗಳಲ್ಲಿ ಭಾಗಿಯಾಗಿದ್ದ ಆಂಧ್ರಪ್ರದೇಶ ಮೂಲದ ಓರ್ವ ವ್ಯಕ್ತಿಯನ್ನು ಸರ್ಕಾರಿ ಅಧಿಕಾರಿಯೊಬ್ಬರು ನೀಡಿದ ದೂರಿನ ಮೇರೆಗೆ ಕೇಂದ್ರ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು ಶ್ರೀನಾಥ್ ರೆಡ್ಡಿ (34ವ) ಎಂದು ಗುರುತಿಸಲಾಗಿದೆ. ಈತ 2007ರಿಂದ ಕ್ರಿಮಿನಲ್ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದನು. ಈ ಹಿಂದೆ ಬೀಗ ಹಾಕಿರುವ ಮನೆಗಳಲ್ಲಿ ಕಳ್ಳತನ ಮಾಡುತ್ತಿದ್ದ ಎಂದು ತನಿಖೆ ವೇಳೆ ಬಹಿರಂಗವಾಗಿದೆ.
ಈತ ಕೇವಲ 10ನೇ ತರಗತಿವರೆಗೆ ವ್ಯಾಸಂಗ ಮಾಡಿರುವ ಆರೋಪಿ 36 ಸರ್ಕಾರಿ ಅಧಿಕಾರಿಗಳಿಗೆ ವಂಚನೆ ಮಾಡಿದ್ದಾನೆ. ಇದುವರೆಗೆ ಒಬ್ಬರು ಮಾತ್ರ ಪೊಲೀಸರಿಗೆ ದೂರು ನೀಡಿದ್ದರು. ಲೋಕಾಯುಕ್ತ ಇನ್ಸ್ ಪೆಕ್ಟರ್ ಚಂದ್ರಶೇಖರ್ ಎಂದು ಹೇಳಿಕೊಂಡು ರೆಡ್ಡಿ ಸರ್ಕಾರಿ ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಿ ಹಣ ವಸೂಲಿ ಮಾಡುತ್ತಿದ್ದ. ಸರ್ಕಾರಿ ಅಧಿಕಾರಿಗಳಿಗೆ ಬೆದರಿಕೆ ಹಾಕುತ್ತಿದ್ದ. ಅವರ ಪ್ರಕರಣಗಳನ್ನು ಮುಚ್ಚಲು ಹಣ ನೀಡುವಂತೆ ಧಮಕಿ ಹಾಕುತ್ತಿದ್ದ. ಅವರು ಕಾಡಿಬೇಡಿದ ನಂತರ ಲೋಕಾಯುಕ್ತದ ತಾಂತ್ರಿಕ ವಿಭಾಗ ಯಾವುದೇ ವಿಚಾರಣೆ ನಡೆಸದೆ ಬಿ ರಿಪೋರ್ಟ್ ಸಲ್ಲಿಸಲಿದೆ ಎಂದು ಭರವಸೆ ನೀಡುತ್ತಿದ್ದ. ಹೀಗೆ ಶ್ರೀನಾಥ್ ರೆಡ್ಡಿಯಿಂದ ಕರೆ ಸ್ವೀಕರಿಸುತ್ತಿದ್ದ ಸರ್ಕಾರಿ ಅಧಿಕಾರಿ ರಾಮದಾಸ್ ದೂರು ದಾಖಲಿಸಿದ್ದಾರೆ.