ಬೆಳಗಾವಿ ; ಬಾಗಲಕೋಟ ಜಿಲ್ಲೆ ಜಮಖಂಡಿ ತಾಲ್ಲೂಕಿನ ಗಲಗಲಿ-ಮರೆಗುದ್ದಿ ಏತ ನೀರಾವರಿ ಯೋಜನೆಯನ್ನು 216 ಕೋಟಿ ರೂ.ವೆಚ್ಚದಲ್ಲಿ ವಿಸ್ತೃತ ಯೋಜನಾ ವರದಿ ಸರ್ಕಾರದ ಪರಿಶೀಲನೆಯಲ್ಲಿದೆ. ಈ ಯೋಜನೆಯಿಂದ ಎಂಟು ಗ್ರಾಮಗಳ 2035 ಹೆಕ್ಟೇರ್ ಜಮೀನಿಗೆ ನೀರಾವರಿ ಸೌಲಭ್ಯ ದೊರೆಯಲಿದೆ ಎಂದು ಜಲಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ ಹೇಳಿದರು.
ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಆನಂದ ಸಿದ್ದು ನ್ಯಾಮಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಕಾರಜೋಳ ಅವರು, ಗಲಗಲಿ-ಮರೆಗುದ್ದಿ ಏತ ನೀರಾವರಿ ಯೋಜನೆಯನ್ನು 100 ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೊಳ್ಳಲಾಗುವುದೆಂದು 2018-19 ರ ಆಯವ್ಯಯ ಭಾಷಣದಲ್ಲಿ ಘೋಷಣೆ ಮಾಡಲಾಗಿತ್ತು. ಈ ಯೋಜನೆಯ 216.50 ಕೋಟಿ ರೂ.ಮೊತ್ತದ ವಿಸ್ತೃತ ಯೋಜನಾ ವರದಿಯು ಆಡಳಿತಾತ್ಮಕ ಅನುಮೋದನೆಗಾಗಿ ಕರ್ನಾಟಕ ನೀರಾವರಿ ನಿಗಮದಿಂದ ಸ್ವೀಕೃತವಾಗಿದ್ದು,ಸರ್ಕಾರದ ಪರಿಶೀಲನೆಯಲ್ಲಿದೆ ಎಂದು ಅವರು ವಿವರಿಸಿದರು.
ಈ ಯೋಜನೆಯಿಂದ ಜಮಖಂಡಿ ತಾಲೂಕಿನ ಮರೆಗುದ್ದಿ, ಹುಲ್ಯಾಳ, ಸಿದ್ದಾಪುರ, ಜಮಖಂಡಿ, ಕೊಣ್ಣೂರ, ಬುದ್ನಿಹುಣಸಿಕಟ್ಟಿ , ಗಣಿ ಹಾಗೂ ಮುಧೋಳ ತಾಲೂಕಿನ ಶಿರೋಳ ಮತ್ತು ಬುದ್ನಿ ಪಿ.ಎಂ.ಗ್ರಾಮಗಳ ಸುಮಾರು 2035 ಹೆಕ್ಟೇರ್ ಜಮೀನುಗಳಿಗೆ ನೀರಾವರಿ ಸೌಲಭ್ಯ ಸಿಗಲಿದೆ. ಕೊಣ್ಣೂರು, ಸಿದ್ದಾಪುರ, ಜಮಖಂಡಿ ಮತ್ತು ಹುಣಸಿಕಟ್ಟೆ ಕೆರೆಗಳನ್ನು ತುಂಬಿಸಲು ಯೋಜಿಸಲಾಗಿದೆ ಎಂದು ಸಚಿವರು ಸದನದಲ್ಲಿ ವಿವರಿಸಿದರು.
ಗಲಗಲಿ-ಮರೆಗುದ್ದಿ ಏತ ನೀರಾವರಿ ಯೋಜನೆಯನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಶಾಸಕ ಆನಂದ ನ್ಯಾಮಗೌಡ ಅವರು ಸಚಿವರಲ್ಲಿ ಮನವಿ ಮಾಡಿದರು.