ಬೆಂಗಳೂರು: ಕಳೆದ ಕೆಲ ಸಮಯದಿಂದ ಕರ್ನಾಟಕ ಬಿಜೆಪಿ ಒಡೆದ ಮನೆಯಂತಾಗಿದೆ. ಹಲವು ನಾಯಕರ ನಡುವೆ ಜಟಾಪಟಿ ಹೇಳಿಕೆ ಪ್ರತಿಹೇಳಿಕೆಗಳ ಸಮರವೇ ನಡೆಯುತ್ತಿದೆ. ಈ ನಡುವೆ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ವಿಚಾರ ಗರಿಗೆದರಿತ್ತು.
ಕೇಂದ್ರ ಸಚಿವೆ ಶೋಭಾ ಕರದ್ಲಾಂಜೆಗೆ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ನೀಡುವ ವಿಚಾರವಾಗಿ ಚರ್ಚೆ ನಡೆದಿತ್ತು. ಇದೀಗ ಸ್ವತಃ ಶೋಭಾ ಕರಂದ್ಲಾಜೆ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ ರಾಜ್ಯಾಧ್ಯಕ್ಷೆ ಸ್ಥಾನ ನೀಡುವ ಬಗ್ಗೆ ನನಗೆ ಮಾಹಿತಿ ಇಲ್ಲ. ನಾನು ಕೇಂದ್ರ ಸಚಿವೆಯಾಗಿಯೇ ಸಂತೋಷವಾಗಿದ್ದೇನೆ. ನಾನು ರಾಜ್ಯ ರಾಜಕಾರಣಕ್ಕೆ ಬರುವ ವಿಚಾರವೇ ಇಲ್ಲ ಎಂದು ಹೇಳಿದ್ದಾರೆ. ನನಗೆ ಒಳ್ಳೇ ಖಾತೆ ಸಿಕ್ಕಿದೆ, ಅಲ್ಲಿಯೇ ಒಳ್ಳೇ ಕೆಲಸ ಮಾಡುತ್ತಿದ್ದೇನೆ. ನನಗೆ ವರಿಷ್ಠರಿಂದಲೂ ಯಾವ ಸೂಚನೆ ಬಂದಿಲ್ಲ. ಇಂತಹ ಸುದ್ದಿ ಹೇಗೆ ಬರುತ್ತಿವೆಯೋ ನನಗೆ ಗೊತ್ತಿಲ್ಲ. ನನ್ನ ಇಚ್ಛೆ ಇರುವುದು ಮುಂದೆಯೂ ಮೋದಿ ಪ್ರಧಾನಿಯಾಗಬೇಕು. ಮೋದಿ ಮತ್ತೆ ಪ್ರಧಾನಿ ಆಗಲೆಂದು ದೇವರಲ್ಲಿ ಪ್ರಾರ್ಥನೆ ಮಾಡಿದ್ದೇನೆ ಎಂದು ತಿಳಿಸಿದ್ದಾರೆ.