ಬೆಂಗಳೂರು: ಬಳ್ಳಾರಿ ಬಿಜೆಪಿ ಸಂಸದ ದೇವೇಂದ್ರಪ್ಪ ಪುತ್ರನ ವಿರುದ್ಧ ಲವ್, ಸೆಕ್ಸ್, ದೋಖಾ ಕೇಸ್ ದಾಖಲಾಗಿದೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಉಪನ್ಯಾಸರಾಗಿ ಕಾರ್ಯನಿರ್ವಹಿಸುತ್ತಿರುವ ಸಂಸದ ದೇವೇಂದ್ರಪ್ಪ ಪುತ್ರ ರಂಗನಾಥ್ ವಿರುದ್ಧ ವಂಚನೆ ದೂರು ದಾಖಲಾಗಿದೆ.
ಮದುವೆಯಾಗುವುದಾಗಿ ನಂಬಿಸಿ ಲೈಂಗಿಕವಾಗಿ ಬಳಿಸಿಕೊಂಡು ಇದೀಗ ಮೋಸ ಮಾಡಿದ್ದಾರೆ ಎಂದು ಬೆಂಗಳೂರು ಮೂಲದ ಯುವತಿ ದೂರು ದಾಖಲಿಸಿದ್ದು, ಈ ದೂರಿ ಮೇರೆಗೆ ಬೆಂಗಳೂರಿನ ಬಸವನಗುಡಿ ಮಹಿಳಾ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಒಂದೂವರೆ ವರ್ಷದ ಹಿಂದೆ ಪಾರ್ಟಿವೊಂದರಲ್ಲಿ ಯುವತಿಯನ್ನು ಪರಿಚಯ ಮಾಡಿಕೊಂಡಿರುವ ರಂಗನಾಥ್, ಬಳಿಕ ಮೈಸೂರಿನ ಹೋಟೆಲ್ನಲ್ಲಿ ಆಕೆಯ ಜೊತೆ ಲೈಂಗಿಕ ಸಂಪರ್ಕ ಬೆಳೆಸಿದ್ದಾರೆ ಎಂದು ಆರೋಪಿಸಲಾಗಿದೆ. ಆದ್ರೆ, ಈಗ ಮದುವೆಯಾಗಲು ಹಿಂದೇಟು ಹಾಕುತ್ತಿದ್ದಾರೆ ಎಮದು ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಿಂದ ಇಬ್ಬರಿಗೂ ನೋಟಿಸ್ ಜಾರಿಯಾಗಿದೆ. ವಿಚಾರಣೆಗೆ ಬರುವಂತೆ ರಂಗನಾಥ್ ಅವರಿಗೆ ನೋಟಿಸ್ ನೀಡಲಾಗಿದೆ. ಇನ್ನು ಯುವತಿಗೆ ಸೂಕ್ತ ದಾಖಲೆ ಸಮೇತ ಠಾಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಲಾಗಿದೆ.