ಬೆಂಗಳೂರು, ಫೆ.1: 2023ರ ಕೇಂದ್ರ ಬಜೆಟ್ ನಲ್ಲಿ ರಾಜ್ಯದ ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ.ಗಳ ಅನುದಾನವನ್ನು ಘೋಷಿಸಿದ್ದಕ್ಕಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಧನ್ಯವಾದ ಅರ್ಪಿಸಿದ್ದಾರೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2023-24ರ ಬಜೆಟ್ ನಲ್ಲಿ ರಾಜ್ಯದ ಬರಪೀಡಿತ ಪ್ರದೇಶಗಳಿಗೆ ಆದ್ಯತೆ ನೀಡಿದ್ದಾರೆ ಎಂದು ಸಿಎಂ ಬೊಮ್ಮಾಯಿ ಹೇಳಿದರು. ರಾಜ್ಯದ ಪ್ರಮುಖ ಯೋಜನೆಗಳಲ್ಲಿ ಒಂದಕ್ಕೆ ಕೇಂದ್ರ ಸರ್ಕಾರ 5,300 ಕೋಟಿ ರೂ.ಗಳನ್ನು ಘೋಷಿಸಿದೆ ಎಂದು ಅವರು ಹೇಳಿದರು.
ಈ ಯೋಜನೆಗೆ ಅನುದಾನ ನೀಡಿದ ಪ್ರಧಾನಿ ನರೇಂದ್ರ ಮೋದಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಕೇಂದ್ರ ಸರ್ಕಾರಕ್ಕೆ ಧನ್ಯವಾದಗಳು ಎಂದು ಸಿಎಂ ಬೊಮ್ಮಾಯಿ ಹೇಳಿದರು.
ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸುವಂತೆ ಕರ್ನಾಟಕದ ಸಿಎಂ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಕೇಂದ್ರ ನಾಯಕತ್ವದ ಮೇಲೆ ಒತ್ತಡ ಹೇರುತ್ತಿದೆ. ಈ ಯೋಜನೆಯ ಅನುಷ್ಠಾನವು ರಾಜ್ಯದ ಮಧ್ಯ ಕರ್ನಾಟಕದ ಜಿಲ್ಲೆಗಳ ಹಣೆಬರಹವನ್ನು ಬದಲಾಯಿಸುತ್ತದೆ.
ಈ ಯೋಜನೆಯು ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ ಮತ್ತು ತುಮಕೂರು ಜಿಲ್ಲೆಗಳ 2.25 ಲಕ್ಷ ಹೆಕ್ಟೇರ್ ಭೂಮಿಗೆ ನೀರಾವರಿ ಒದಗಿಸುತ್ತದೆ. ಇದು ನೀರಾವರಿಗಾಗಿ ೧೯ ಟಿಎಂಸಿ ನೀರನ್ನು ಒದಗಿಸುತ್ತದೆ. ಈ ಯೋಜನೆಯು ವಾಣಿ ವಿಲಾಸ ಜಲಾಶಯದ ಸಾಮರ್ಥ್ಯವನ್ನು ಹೆಚ್ಚಿಸುವ ಮತ್ತು 350 ಕ್ಕೂ ಹೆಚ್ಚು ಕೆರೆಗಳನ್ನು ತುಂಬಿಸುವ ಗುರಿಯನ್ನು ಹೊಂದಿದೆ.
“ಇತರ ದೇಶಗಳಿಗೆ ಹೋಲಿಸಿದರೆ, ಭಾರತದ ಆರ್ಥಿಕ ಬೆಳವಣಿಗೆ ಶೇಕಡಾ 6.4 ಕ್ಕೆ ತಲುಪುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ, ಇದು ಭಾರತೀಯ ಆರ್ಥಿಕತೆಗೆ ಉತ್ತೇಜನ ನೀಡುವ ಬಜೆಟ್ ಆಗಲಿದೆ.
ಇದು ಭಾರತದ ವಿವಿಧ ವಲಯಗಳನ್ನು ಸದೃಢಗೊಳಿಸುವ ಬಜೆಟ್ ಎಂದು ಅವರು ಹೇಳಿದ್ದಾರೆ. ದೇಶದ ಆರ್ಥಿಕತೆಗೆ ಉತ್ತೇಜನ ದೊರೆತರೆ, ಪ್ರತಿಯೊಬ್ಬ ನಾಗರಿಕನೂ ಪ್ರಯೋಜನ ಪಡೆಯುತ್ತಾನೆ ಎಂದು ಅವರು ಹೇಳಿದರು.