ಬೆಂಗಳೂರು, ಜ.1: ನಂದಿನಿ ತನ್ನ ಪ್ರತ್ಯೇಕ ಅಸ್ತಿತ್ವವನ್ನು ಸದಾ ಕಾಯ್ದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟ ಪಡಿಸಿದರು.
ಅವರು ಇಂದು ತಮ್ಮ ಆರ್.ಟಿ. ನಗರ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ನಂದಿನಿಯನ್ನು ಅಮುಲ್ ನೊಂದಿಗೆ ವಿಲೀನ ಮಾಡುತ್ತಾರೆ ಎನ್ನುವುದು ತಪ್ಪು ಕಲ್ಪನೆ. ಯಾರೂ ಊಹೆ ಮಾಡಿ ಟೀಕೆ ಮಾಡಬಾರದು. ಕೇಂದ್ರ ಗೃಹ ಮತ್ತು ಸಹಕಾರ ಸಚಿವರು ಮಾತನಾಡಿರುವುದು ಸ್ಪಷ್ಟವಾಗಿದೆ. ಒಬ್ಬರಿಗೊಬ್ಬರು ಸಹಕಾರದಿಂದ ನಂದಿನಿ ಮತ್ತು ಅಮುಲ್ ತಾಂತ್ರಿಕ ವಾಗಿ, ಮಾರುಕಟ್ಟೆಯಲ್ಲಿ ಸಹಕಾರ ಮಾಡಬೇಕು. ಇವೆರಡೂ ದೊಡ್ಡ ಸಂಸ್ಥೆಗಳು. ಪೂರಕವಾಗಿ ಕೆಲಸ ಮಾಡಬೇಕು. ಅದರರ್ಥ ವಿಲೀನಗೊಳಿಸುವುದು ಎಂದಲ್ಲ. ನಂದಿನಿ ಅಸ್ತಿತ್ವ ನೂರಾರು ವರ್ಷ ಶಾಶ್ವತವಾಗಿ ಇರಲಿದೆ ಎಂದರು.
ಒಟ್ಟಾಗಿ ಕೆಲಸ ಮಾಡಿದರೆ ಲಾಭ
ಯಾವುದೂ ಸಮಸ್ಯೆಯಿಲ್ಲ. ಕೆಲವು ವಲಯಗಳಲ್ಲಿ ಇಬ್ಬರೂ ಒಟ್ಟಿಗೆ ಕೆಲಸ ಮಾಡಿದರೆ ಲಾಭವಿದೆ. ನಂದಿನಿ ಅಥವಾ ಅಮುಲ್ ತಾಂತ್ರಿಕವಾಗಿ ಮುಂದಿದ್ದರೆ ವಿನಿಯಮ ಮಾಡಿಕೊಳ್ಳಬಹುದು. ಆಡಳಿತಾತ್ಮಕ ಕ್ರಮಗಳನ್ನು ವಿನಿಮಯ ಮಾಡಿಕೊಳ್ಳಿ ಎಂದು ಅವರು ಹೇಳಿರುವುದು. ಅದರ ತಪ್ಪು ಅರ್ಥ ಕಲ್ಪಿಸುವ ಅಥವಾ ರಾಜಕಾರಣ ಮಾಡುವ ಅವಶ್ಯಕತೆ ಇಲ್ಲ. ನಾನು ಮುಖ್ಯಮಂತ್ರಿಯಾಗಿ ಹೇಳುವುದು, ನಂದಿನಿ ತನ್ನ ಪ್ರತ್ಯೇಕ ಅಸ್ತಿತ್ವವನ್ನು ಸದಾ ಕಾಯ್ದುಕೊಳ್ಳಲಿದೆ ಎಂದರು.
ಮೀಸಲಾತಿ ಸಂವಿಧಾನದ ಚೌಕಟ್ಟಿನಲ್ಲಿ ಇದೆ
ಮೀಸಲಾತಿ ವಿಚಾರದಲ್ಲಿ ಪ್ರತಿಕ್ರಿಯೆ ನೀಡಿ ಅಂತಿಮ ವರದಿ ಬಂದಾಗ ಅದಕ್ಕೆ ಸ್ಪಷ್ಟ ರೂಪ ದೊರಕಲಿದೆ. ಸಂವಿಧಾನದ ಚೌಕಟ್ಟಿನಲ್ಲಿ ಸರಿಯಾಗಿರಲಿದೆ ಎಂದರು.