ಬೆಂಗಳೂರು: ಮುಂಬರುವ 2024 ರ ಲೋಕಸಭೆ ಚುನಾವಣೆಗೆ ಮುನ್ನ ರಾಜ್ಯದಲ್ಲಿ ಬಿಜೆಪಿಯ ಪ್ರಮುಖ ನಾಯಕರನ್ನು ತನ್ನ ತೆಕ್ಕೆಗೆ ಸೆಳೆಯಲು ಕಾಂಗ್ರೆಸ್ ಮಾಸ್ಟರ್ ಪ್ಲ್ಯಾನ್ ಮಾಡಿದೆ.
‘ಆಪರೇಷನ್ ಹಸ್ತ ಮೂಲಕ ಬಿಜೆಪಿಯ ಹಿರಿಯ ನಾಯಕರನ್ನು ತನ್ನ ಬುಟ್ಟಿಗೆ ಹಾಕಿಕೊಳ್ಳಲು ಕಾಂಗ್ರೆಸ್ ಪ್ರಯತ್ನಿಸುತ್ತದೆ. ಕಾಂಗ್ರೆಸ್ ನಿಂದ ಬಿಜೆಪಿಗೆ ವಲಸೆ ಬಂದಿದ್ದ ಎಸ್.ಟಿ. ಸೋಮಶೇಖರ್ ಮತ್ತು ಎಂ.ಟಿ.ಬಿ. ನಾಗರಾಜ್ ಮರಳಿ ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ. ಅದಕ್ಕೆ ಇಂಬು ನೀಡುವಂತೆ ಯಶವಂತಪುರದ ಹಾಲಿ ಬಿಜೆಪಿ ಶಾಸಕ ಸೋಮಶೇಖರ್ ಇತ್ತೀಚೆಗೆ ಸಾರ್ವಜನಿಕ ಸಮಾರಂಭವೊಂದರಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನನ್ನ ‘ಗುರು’ ಎಂದಿದ್ದರು. ಮುಂದುವರಿದು, ರಾಜಕೀಯವಾಗಿ ಏನೇ ಸಾಧನೆ ಮಾಡಿದ್ದರೂ ಅದು ಶಿವಕುಮಾರ್ ಅವರ ಆಶೀರ್ವಾದದಿಂದ ಎಂದು ಹೇಳಿದ್ದರು. ಈ ಹೇಳಿಕೆ ಬಿಜೆಪಿ ಮುಖಂಡರಿಗೆ ಮುಜುಗರ ತಂದಿಟ್ಟಿತ್ತು. ಕುರುಬ ಸಮುದಾಯಕ್ಕೆ ಸೇರಿದ ಎಂ.ಟಿ.ಬಿ. ನಾಗರಾಜ್ ಬಿಜೆಪಿ ಸೇರಿದ ನಂತರ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಾಗುತ್ತಿಲ್ಲ ಎಂದು ಹೇಳುವ ಮೂಲಕ ತಮ್ಮ ಅಸಮಾಧಾನವನ್ನು ಬಹಿರಂಗ ಮಾಡಿದ್ದಾರೆ.
ಸೋಮಶೇಖರ್ ಅವರಂತೆಯೇ ಎಂಟಿಬಿ ನಾಗರಾಜ್ ಸಚಿವ ಸ್ಥಾನವನ್ನು ತೊರೆದು ಬಿಜೆಪಿ ಸೇರ್ಪಡೆಯಾಗಿದ್ದರು. ಆದರೆ ಬಿಜೆಪಿಯಲ್ಲಿ ಅವರಿಗೆ ಯಾವುದೇ ಸ್ಥಾನಮಾನಗಳು ಸರಿಯಾಗಿ ದೊರೆಯುತ್ತಿಲ್ಲ ಎಂಬ ಕೊರಗಿದೆ. ಹೀಗಾಗಿ ಅವರು ಕೂಡ ಮರಳಿ ಕಾಂಗ್ರೆಸ್ ಸೇರುವ ಸಾಧ್ಯತೆ ದಟ್ಟವಾಗಿದೆ. ಕಾಂಗ್ರೆಸ್ನಿಂದ ಬಿಜೆಪಿಗೆ ಸೇರ್ಪಡೆಯಾಗಿದ್ದ ಹಿರಿಯ ಮುಖಂಡ ಎಚ್.ವಿಶ್ವನಾಥ್ ಈಗಾಗಲೇ ಕಾಂಗ್ರೆಸ್ ಸೇರ್ಪಡೆಯಾಗುವುದಾಗಿ ಹೇಳಿದ್ದಾರೆ. ‘ಆಪರೇಷನ್ ಹಸ್ತ’ಕ್ಕೆ ಉಪ ಸಿಎಂ ಶಿವಕುಮಾರ್ ವಿಶೇಷ ಆಸಕ್ತಿ ವಹಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.