ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಉದ್ಘಾಟಿಸಿದರು. ವಾರ್ಷಿಕ 2.5 ಕೋಟಿ ಹೆಚ್ಚುವರಿ ಪ್ರಯಾಣಿಕರಿಗೆ ಅನುಕೂಲವಾಗಲು 13,000 ಕೋಟಿ ರೂ.ಗಳ ವೆಚ್ಚದಲ್ಲಿ ಟರ್ಮಿನಲ್ ಅನ್ನು ನಿರ್ಮಿಸಲಾಗಿದೆ.
ಈ ಸಂದರ್ಭದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಮತ್ತಿತರರು ಉಪಸ್ಥಿತರಿದ್ದರು.
ವಂದೇ ಭಾರತ್ಎಕ್ಸ್ಪ್ರೆಸ್ ರೈಲು ಮತ್ತು ಭಾರತ್ ಗೌರವ್ ಕಾಶಿ ದರ್ಶನ್ ರೈಲಿಗೆ ಅವರು ಹಸಿರು ನಿಶಾನೆ ತೋರಿದರು. ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಗಂಟೆಗೆ 160 ಕಿ.ಮೀ ವೇಗದಲ್ಲಿ ಚಲಿಸುತ್ತದೆ ಮತ್ತು 52 ಸೆಕೆಂಡುಗಳಲ್ಲಿ ಗಂಟೆಗೆ 100 ಕಿ.ಮೀ ವೇಗವನ್ನು ಪಡೆಯುತ್ತದೆ.
ಮೆಜೆಸ್ಟಿಕ್ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ರೈಲುಗಳಿಗೆ ಹಸಿರು ನಿಶಾನೆ ತೋರಿದ ನಂತರ, ಪ್ರಧಾನಮಂತ್ರಿಯವರು ತಮ್ಮ ವಾಹನದಿಂದ ಇಳಿದು ಬೃಹತ್ ಜನಸಮೂಹದ ಕಡೆಗೆ ನಡೆದರು ಮತ್ತು ಅವರತ್ತ ಕೈಬೀಸಿದರು. ನಂತರ, ಅವರು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ನಿರ್ಮಿಸಲಾದ 108 ಅಡಿ ಎತ್ತರದ ಕೆಂಪೇಗೌಡ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ.