ಬೆಂಗಳೂರು: ರಾಜ್ಯ ಸರಕಾರದ ಈ ಮಹತ್ವಾಕಾಂಕ್ಷಿ “ಪುಣ್ಯಕೋಟಿ ದತ್ತು ಯೋಜನೆ’ಗೆ ಕರ್ನಾಟಕ ಸಾಕ್ಷಿಯಾಗಲಿದ್ದು, ಜು. 28ರಂದು ಈ ಯೋಜನೆಗೆ ಅಧಿಕೃತ ಚಾಲನೆ ಸಿಗಲಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಶುಸಂಗೋಪನೆ ಸಚಿವ ಪ್ರಭು ಬಿ. ಚವ್ಹಾಣ್, ಗೋ ಸಂಕುಲವನ್ನು ಸಂರಕ್ಷಿಸಲು ಗೋಶಾಲೆಗಳಲ್ಲಿರುವ ಜಾನುವಾರುಗಳನ್ನು ಪೋಷಣೆ ಮತ್ತು ಪಾಲನೆಗಾಗಿ ಸಾರ್ವಜನಿಕರು ಮತ್ತು ಖಾಸಗಿ ಸಂಸ್ಥೆಗಳು ದತ್ತು ತೆಗೆದುಕೊಳ್ಳುವುದನ್ನು ಪ್ರೋತ್ಸಾಹಿಸಲು ನಮ್ಮ ಸರಕಾರ ರಾಷ್ಟ್ರದಲ್ಲೇ ಮೊದಲ ಬಾರಿಗೆ ಈ ಯೋಜನೆ ಪ್ರಾರಂಭಿಸಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರ ವಹಿಸಿಕೊಂಡು ಜುಲೈ 28ಕ್ಕೆ ಒಂದು ವರ್ಷ ಪೂರ್ಣಗೊಳ್ಳುವ ಹಿನ್ನೆಲೆಯಲ್ಲಿ ಅದೇ ದಿನ ಯೋಜನೆಗೆ ಚಾಲನೆ ನೀಡಲಾಗುವುದು ಎಂದರು.
ಜಾನುವಾರುಗಳ ದತ್ತು ಯೋಜನೆಯಡಿ ಪುಣ್ಯಕೋಟಿ ದತ್ತು ಪೋರ್ಟಲ್ನಲ್ಲಿರುವ ಯಾವುದೇ ಗೋಶಾಲೆಯ ಪ್ರತಿ ಜಾನುವಾರಿಗೆ ವಾರ್ಷಿಕ 11 ಸಾವಿರ ರೂ.ಗಳನ್ನು ಪಾವತಿಸಿ ದತ್ತು ಪಡೆಯಬಹುದು. ಅದೇ ರೀತಿ ಜಾನುವಾರು ಗಳಿಗಾಗಿ “ಆಹಾರ’ (ಫೀಡ್ ಎ ಕೌ) ಯೋಜನೆಯಡಿ ಸಾರ್ವಜನಿಕರು ತಮ್ಮ ಜೀವನದ ವಿಶೇಷ ಸಂದರ್ಭಗಳಲ್ಲಿ ಅಂದರೆ, ಹುಟ್ಟುಹಬ್ಬ, ಮದುವೆ ವಾರ್ಷಿಕೋತ್ಸವ ಇತ್ಯಾದಿಗಳ ಸಂದರ್ಭದಲ್ಲಿ ಪುಣ್ಯಕೋಟಿ ದತ್ತು ಪೋರ್ಟಲ್ನಲ್ಲಿರುವ ಯಾವುದೇ ಗೋಶಾಲೆಗಳಲ್ಲಿರುವ ರಾಸುಗಳಿಗೆ ಒಂದು ದಿನಕ್ಕೆ 70 ರೂ.ಗಳಂತೆ ತಮಗೆ ಇಷ್ಟವಾದಷ್ಟು ರಾಸುಗಳಿಗೆ ಆಹಾರಕ್ಕಾಗಿ ವಂತಿಗೆ ನೀಡಲು ಅವಕಾಶ ಕಲ್ಪಿಸಲಾಗಿದೆ ಎಂದರು.