ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿಯಲ್ಲಿ ಕೆಲ ಶಾಸಕರಿಗೆ ಟಿಕೇಟ್ ಕೈ ತಪ್ಪುವ ಸಾಧ್ಯತೆಯಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ರಾಜ್ಯದಲ್ಲಿ ಟಿಕೆಟ್ ಹಂಚಿಕೆ ಕುರಿತು, ಈಚೆಗೆ ಮೊದಲ ಹಂತದ ಸಭೆಯೊಂದು ನಡೆದಿದೆ.
ಕರಾವಳಿ ಜಿಲ್ಲೆಗಳಲ್ಲೂ ಕೆಲವ ರಿಗೆ ಟಿಕೇಟ್ ಕೈ ತಪ್ಪುವ ಸಾಧ್ಯತೆ ಎದುರಾಗಿದೆ. ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ. ಎಲ್. ಸಂತೋಷ್, ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಸೇರಿದಂತೆ ಆಯ್ದ ಕೆಲವೇ ವ್ಯಕ್ತಿಗಳು ಸಭೆಯಲ್ಲಿ ಭಾಗಿಯಾಗಿದ್ದರು.
ಆಡಳಿತ ವಿರೋಧಿ ಅಲೆ ಹಾಗೂ ಕ್ಷೇತ್ರ ವಿದ್ಯಮಾನಗಳು ಹಾಗೂ ಸಮೀಕ್ಷಾ ವಾರು ಶಾಸಕರ ಬಗ್ಗೆ ಇರುವ ಪ್ರತಿ ವರದಿ ಆಧರಿಸಿ ಚರ್ಚೆ ನಡೆದಿದೆ.
ಮಹತ್ವ ಪಡೆದ ಯಡಿಯೂರಪ್ಪ ಹೇಳಿಕೆ: ಹಾಲಿ ಶಾಸಕರೆಲ್ಲರಿಗೂ ಟಿಕೆಟ್ ನೀಡಲು ಸಾಧ್ಯವಿಲ್ಲ ಎಂಬ ವಿಚಾರವನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್, ಯಡಿಯೂರಪ್ಪ ಕೆಲವು ದಿನಗಳ ಹಿಂದೆಯೇ ಹೇಳಿದ್ದಾರೆ. ಬಿಜೆಪಿ ಮೂಲಗಳ ಪ್ರಕಾರ ಪ್ರತೀ ತಿಂಗಳೂ ಅಮಿತ್ ಶಾ ರಾಜ್ಯದ ಬೆಳವಣಿಗೆಗೆ ಸಂಬಂಧಪಟ್ಟಂತೆ ವರದಿ ತರಿಸಿಕೊಂಡು ಎಲ್ಲ ವಿಧಾನಸಭಾ ಕ್ಷೇತ್ರಗಳ ಮಾಹಿತಿ ಸಂಗ್ರಹಿಸುತ್ತಿದ್ದಾರೆ.
ಇದರ ಆಧಾರದ ಮೇಲೆ ಶಾಸಕರಿಗೆ ವಿರೋಧಿ ಅಲೆ ಇರುವುದು ದೃಢಪಟ್ಟಿದೆ. ಜತೆಗೆ ವಿಭಾಗೀಯ ಪ್ರಮುಖರಿಂದ ಪ್ರತ್ಯೇಕ ವರದಿ ಸಂಗ್ರಹಕ್ಕೂ ಪಕ್ಷ ಸೂಚನೆ ನೀಡಿದೆ ಎಂದು ತಿಳಿದು ಬಂದಿದೆ.