ಬೆಂಗಳೂರು: ಬೆಂಗಳೂರಿನ ವೈಟ್ಫೀಲ್ಡ್ನಲ್ಲಿರುವ ಹೋಪ್ ಫಾರ್ಮ್ ಬಳಿ ಘೋರ ದುರಂತವೊಂದು ನಡೆದುಹೋಗಿದೆ. ಹೋಪ್ ಫಾರ್ಮ್ ಬಳಿ ವಿದ್ಯುತ್ ತಂತಿ ತುಳಿದು ಮಹಿಳೆ ಮತ್ತು ಒಂದು ಮಗು ಸಾವನ್ನಪ್ಪಿದ್ದು, ಇದಕ್ಕೆ ಸಂಬಂಧಿಸಿದಂತೆ ಬೆಸ್ಕಾಂನ ಎಇ ಹಾಗೂ ಎಇಇಯನ್ನು ಅಮಾನತು ಮಾಡಲಾಗಿದೆ.
ಈ ಬಗ್ಗೆ ಇಂಧನ ಸಚಿವ ಕೆಜೆ ಜಾರ್ಜ್ ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ್ದು, ಘಟನೆಗೆ ಕಾರಣರಾದ ಎಇ, ಎಇಇರನ್ನು ಅಮಾನತುಗೊಳಿಸಿದ್ದೇವೆ. ಪ್ರಕರಣದ ಬಗ್ಗೆ ತನಿಖೆಗೆ ಆದೇಶ ನೀಡಿದ್ದೇವೆ. ನಿರ್ಲಕ್ಷ್ಯವಹಿಸಿದ್ರೆ ಉಳಿದವರ ವಿರುದ್ಧವೂ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು.
ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದಿದ್ದಾರೆ. ಪ್ರಕರಣ ಕುರಿತು ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಪೊಲೀಸರು ಮೂವರು ಬೆಸ್ಕಾಂ ಅಧಿಕಾರಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.