ಬೆಂಗಳೂರು: ಮುಂದಿನ ದಿನಗಳಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಪುರುಷರನ್ನೊಳಗೊಳ್ಳಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ, ರವೀಂದ್ರ ಕಲಾಕ್ಷೇತ್ರ ಕನ್ನಡ ಭವನದಲ್ಲಿ ಆಯೋಜಿಸಿರುವ “ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ” ಕಾರ್ಯಕ್ರಮ ಉದ್ಘಾಟಿಸಿ ಮತ್ತು “ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪ್ರದಾನ” ಮಾಡಿ ಮಾತನಾಡಿದರು.
ತಾಯಿಯೊಂದಿಗೆ ಜನ್ಮಪೂರ್ವದ ಸಂಬಂಧವಿದ್ದು, ಇದೊಂದು ಪವಿತ್ರ ಸಂಬಂಧ. ಮನುಕುಲದ ಮುಂದುವರಿಕೆ ನಿರಂತರವಾಗಿ ತಾಯಿಂದಿರು ಮಾಡಿದ್ದಾರೆ. ನಮ್ಮ ತಾಯಿ, ಮಕ್ಕಳು, ಪತ್ನಿಯಿಂದ ಸದಾ ಸೇವೆ ಪಡೆಯುವುದು ಪುರುಷ. ಮಹಿಳೆಗೆ ತೊಂದರೆಯಾದರೆ ಅದು ಗಂಡು ಮಕ್ಕಳಿಂದ , ಹೀಗಾಗಿ ಗಂಡು ಮಕ್ಕಳಿಗೆ ಜಾಗೃತಿ ಮೂಡಿಸುವ ಕೆಲಸ ಆಗಬೇಕು. ಜಗತ್ತಿನ ಎಲ್ಲಾ ದೇಶಗಳಲ್ಲಿ ಮಹಿಳೆಯರನ್ನು ಒಗ್ಗೂಡಿಸಿ ಅವರ ಸುರಕ್ಷತೆ ಹಾಗೂ ಆರ್ಥಿಕ ಸ್ವಾತಂತ್ರ್ಯ ನೀಡಿ ಸಬಲರನ್ನಾಗಿ ಮಾಡಲು ಸಂಯುಕ್ತ ರಾಷ್ಟ್ರ ತೀರ್ಮಾನ ಮಾಡಿ ಈ ದಿನಾಚರಣೆ ಆಚರಣೆ ಮಾಡಲಾಗುತ್ತಿದೆ.
ನಮ್ಮದು ಪುರುಷ ಪ್ರಧಾನ ಸಮಾಜ ಆದರೆ, ಮೊದಲಿನಿಂದಲೂ ನೋಡಿದರೆ, ಮಹಿಳೆ ಸಾಕಷ್ಟು ಸಾಧನೆ ಮಾಡಿದ್ದಾಳೆ. ನಮ್ಮ ಪುರಾಣಗಳಲ್ಲಿ ಮಹಿಳೆಯರು ಸಾಕಷ್ಟು ಮಹತ್ವ ಪಡೆದಿದ್ದಾರೆ. ಸ್ವಾತಂತ್ರ್ಯ. ಹೋರಾಟದಲ್ಲಿ ಕಿತ್ತೂರು ಚೆನ್ನಮ್ಮ ಕಹಳೆ ಊದಿದರು. ಅನೇಕ ಮಹಿಳೆಯರು ಸ್ವಾತಂತ್ರ್ಯ ಹೋರಾಟ ಮಾಡಿದ್ದಾರೆ.
ನಾವು ಸಮಸ್ಯೆ ಬಗ್ಗೆ ಚರ್ಚೆ ಮಾಡುತ್ತೇವೆ . ಆದರೆ ಮಹಿಳೆಯರು ಸಮಸ್ಯೆಯ ಜೊತೆಗೆ ಬದುಕುತ್ತಿದ್ದಾರೆ. ಹೀಗಾಗಿ ಈ ವರ್ಷ ಬಜೆಟ್ ನಲ್ಲಿ ಹೊಲದಲ್ಲಿ ಕೆಲಸ ಮಾಡುವ ಎಲ್ಲ ಮಹಿಳೆಯರಿಗೆ ಪ್ರತಿ ತಿಂಗಳು ಒಂದು ಸಾವಿರ ರೂ ನೀಡಲು ತೀರ್ಮಾನಿಸಲಾಗಿದೆ. ಅಂಗನವಾಡಿ ಕಾರ್ಯಕರ್ತರು ಎಲ್ಲ ಮಕ್ಕಳ ತಾಯಿಯಾಗಿ ಕೆಲಸ ಮಾಡುತ್ತಿದ್ದಾರೆ. ಅವರ ಸಹನೆ ಮೆಚ್ಚುವಂತದ್ದು, ಅವರಿಗೆ ಕಳೆದ ವರ್ಷ 1000 ರೂ. ಈ ವರ್ಷ ಒಂದು ಸಾವಿರ. ರೂ. ಹೆಚ್ಚಳ ಮಾಡಲಾಗಿದೆ. ಉದ್ಯೋಗ, ಶಿಕ್ಷಣ ಮತ್ತು ಸಬಲೀಕರಣ ಎಂಬ ಮೂರು ಮಂತ್ರ ಅಳವಡಿಸಿಕೊಂಡು ಶಿಕ್ಷಣದ ಮೇಲೆ ಬಂಡವಾಳ ಹೂಡಿಮೆ ಮಾಡಲಾಗಿದೆ.
ಅದಕ್ಕಾಗಿ ಎಲ್ಲ ಹೆಣ್ಣುಮಕ್ಕಳಿಗೆ ಉಚಿತ ಶಿಕ್ಷಣ ಕೊಡಲು ತೀರ್ಮಾಸಲಾಗಿದೆ ಎಂದರಲ್ಲದೇ ಮಹಿಳೆಯರು ಎಲ್ಲ ರಂಗದಲ್ಲಿ ಕೆಲಸ ಮಾಡುತ್ತಿದ್ದಾರೆ. ಆತ್ಮವಿಶ್ವಾಸ ವಿದ್ದರೆ ಏನಾದರೂ ಸಾಧಿಸಬಹುದು ಎಂದರು.
ಸ್ತ್ರೀ ಸಾಮರ್ಥ್ಯ ಯೋಜನೆ ಅಡಿ 5 ಲಕ್ಷ ರೂ. ನೀಡಲಾಗುತ್ತಿದೆ. ಆರೂವರೆ ಕೋಟಿ ಜನಸಂಖ್ಯೆ ಇದೆ. 13 ಕೋಟಿ ಕೈಗಳು ಕೆಲಸ ಮಾಡಿದರೆ ಇನ್ನೂ ಹೆಚ್ಚು ಅಭಿವೃದ್ದಿ ಸಾಧಿಸಲು ಸಾಧ್ಯ ಎಂದರು. ಸ್ತ್ರೀ ಶಕ್ತಿ ಯಿಂದ ರಾಜ್ಯದ ಅಭಿವೃದ್ಧಿ ಸಾಧ್ಯ ಎಂಬ ನಂಬಿಕೆ ನಮ್ಮ ಸರ್ಕಾರದ್ದು ಎಂದರು.
ಮಹಿಳೆಯ ಸುರಕ್ಷತೆಗೆ ನಮ್ಮ ಸರ್ಕಾರ ವ್ಯವಸ್ಥೆ ಕಲ್ಪಿಸಿದ್ದು, ಸುರಕ್ಷಿತ ನಗರ ಯೋಜನೆಗೆ ಚಾಲನೆ ನೀಡಲಾಗಿದೆ. ಏಳು ಸಾವಿರ ಕ್ಯಾಮೆರಾ ಅಳವಡಿಸಿ ಕಮಾಂಡ್ ಸೆಂಟರ್ ಸ್ಥಾಪಿಸಲಾಗಿದೆ. 400 ವಾಹನಗಳನ್ನು ಒದಗಿಸಲಾಗಿದೆ. ಈ ಯೋಜನೆಯನ್ನು ತಾಲ್ಲೂಕು ಕೇಂದ್ರ ಹಾಗೂ ಎಲ್ಲಾ ಮಹಾನಗರಪಾಲಿಕೆಗಳಿಗೆ ವಿಸ್ತರಣೆ ಮಾಡಲಾಗುವುದು. ಎಲ್ಲಾ ಹಂತಗಳಲ್ಲಿ ಮಹಿಳಾ ಸುರಕ್ಷತೆ ಅತ್ಯಂತ ಮುಖ್ಯವಾಗಿದೆ. ಮಹಿಳೆಯರು ಹಣ ಉಳಿತಾಯ ಮಾಡುವ ಪ್ರವೃತ್ತಿಯಿಂದ ನಮ್ಮ ಆರ್ಥಿಕತೆ ಇನ್ನೂ ಸದೃಢವಾಗಿದೆ. ಅಮೇರಿಕಾದ ಬ್ಯಾಂಕುಗಳು ದಿವಾಳಿಯಾದರೂ ನಮ್ಮ ಮಹಿಳೆಯರ ಉಳಿತಾಯ ಸಂಸ್ಕೃತಿ ಆರ್ಥಿಕತೆಗೆ ಕೊಡುಗೆ ನೀಡಿದೆ ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಹಾಲಪ್ಪ ಆಚಾರ್, ಸಾಲು ಮರದ ತಿಮ್ಮಕ್ಕ, ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ.ನಾಯ್ಡು, ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಅಧ್ಯಕ್ಷ ರಾಜಣ್ಣಗೌಡ, ಡಿ.ಆರ್.ಡಿ.ಓ ಸಂಸ್ಥೆಯ ಆಶು ಭಾಟಿಯಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರ್ದೇಶಕಿ ಡಾ.ಅನುರಾಧಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ಮಂಜುಳಾ ಮೊದಲಾದವರು ಉಪಸ್ಥಿತರಿದ್ದರು.