ಬೆಂಗಳೂರು: ಭಗವಾನ್ ರಾಮನನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ಹೋಲಿಸಿ ಮಾತನಾಡಿದ್ದಕ್ಕೆ ಆಂಜನೇಯ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
‘ಇಂತಹ ಅವಿವೇಕಿಗಳು, ಸ್ವಜನಪಕ್ಷಪಾತಿಗಳು, ಹಿಂದೂ ವಿರೋಧಿಗಳು ಈ ಹಿಂದೆ ರಾಜ್ಯದ ಸಚಿವಾರಿಗಿದ್ದರು ಎಂಬುದು ರಾಜ್ಯದ ದೌರ್ಭಾಗ್ಯ! ಆಂಜನೇಯಪ್ಪನವರ ಪೂಜ್ಯ ದೇವರಾದ ಸಿದ್ದರಾಮಯ್ಯನವರಿಗೆ ಅವರ ಮನೆಯಲ್ಲಿ ಸಕಲ ರೀತಿಯಲ್ಲಿ ಪೂಜಾ ಕೈಂ-ಕಾರ್ಯಗಳು ನಡೆಯಲಿ. ಹಿಂದೂಗಳ ಆರಾಧ್ಯ ದೈವ ಶ್ರೀ ರಾಮ ದೇವರ ಬಗ್ಗೆ ಮಾತನಾಡುವುದನ್ನು ನಿಲ್ಲಿಸಿ ಘನತೆಯಿಂದ, ಗೌರವದಿಂದ ವರ್ತಿಸಲಿ’ ಎಂದು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಹೇಳಿಕೊಂಡಿದ್ದಾರೆ.
ಚಿತ್ರದುರ್ಗದಲ್ಲಿ ಸೋಮವಾರ ಮಾತನಾಡಿದ್ದ ಆಂಜನೇಯ, ಸಿಎಂ ಸಿದ್ದರಾಮಯ್ಯ ಅವರೇ ಒಬ್ಬ ರಾಮ, ಇನ್ನು ಅವರು ಆ ರಾಮನನ್ನು (ಅಯೋಧ್ಯೆಯ ರಾಮನ ಉದ್ದೇಶಿಸಿ) ಹೋಗಿ ಯಾಕೆ ಪೂಜಿಸಬೇಕು ಎಂದು ಪ್ರಶ್ನಿಸಿದ್ದರು. ಅಯೋಧ್ಯೆಯ ರಾಮ ಮಂದಿರ ಉದ್ಘಾಟನೆಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡಿಲ್ಲ ಎಂಬ ಕುರಿತಾದ ಚರ್ಚೆಗೆ ಚಿತ್ರದುರ್ಗದಲ್ಲಿ ಪ್ರತಿಕ್ರಿಯಿಸಿದ ಅವರು, ರಾಮಮಂದಿರ ಉದ್ಘಾಟನೆಗೆ ಕರೆಯದಿದ್ದದ್ದೇ ಒಳ್ಳೆಯದಾಯಿತು ಎಂದು ಹೇಳಿದ್ದರು.