ಬೆಂಗಳೂರು: ನಾಲ್ಕು ಜನರನ್ನು ಬಲಿತೆಗೆದುಕೊಂಡಿರುವ ಚಿರತೆಯನ್ನು ಸೆರೆಹಿಡಿಯಲು ಕಾರ್ಯಪಡೆಯನ್ನು ರಚಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ.
ಮಂಗಳವಾರ ನಡೆದ ಅರಣ್ಯ ಇಲಾಖೆ ಮತ್ತು ಮೈಸೂರು ಜಿಲ್ಲಾಡಳಿತದ ಅಧಿಕಾರಿಗಳ ಸಭೆಯಲ್ಲಿ ಚಿರತೆ ದಾಳಿಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಅವರು, ಚಿರತೆಯನ್ನು ಸೆರೆಹಿಡಿಯಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಟಿ.ನರಸೀಪುರ ತಾಲ್ಲೂಕಿನಲ್ಲಿ 158 ಜನರು ಕೂಂಬಿಂಗ್ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ ಎಂದು ಅಧಿಕಾರಿಗಳು ಸಿಎಂಗೆ ಮಾಹಿತಿ ನೀಡಿದರು.
ಇತ್ತೀಚಿನ ಘಟನೆಯ 3-4 ಕಿ.ಮೀ ವ್ಯಾಪ್ತಿಯಲ್ಲಿ ಗಸ್ತು ತಿರುಗುವಂತೆ ಬೊಮ್ಮಾಯಿ ಅರಣ್ಯ ಇಲಾಖೆಗೆ ಸೂಚಿಸಿದರು. ತಾಲೂಕಿನಲ್ಲಿ ಒಟ್ಟು 21 ಗ್ರಾಮಗಳು ಚಿರತೆ ಹಾವಳಿಗೆ ತುತ್ತಾಗಿವೆ. ಚಿರತೆಯನ್ನು ಸೆರೆಹಿಡಿಯಲು ಸ್ಥಳೀಯ ಜನರ ಸಹಾಯವನ್ನು ತೆಗೆದುಕೊಳ್ಳಬೇಕು. ಅಗತ್ಯವಿದ್ದರೆ, ಸಶಸ್ತ್ರ ಮೀಸಲು ಪೊಲೀಸರ ಸಹಾಯವನ್ನು ತೆಗೆದುಕೊಳ್ಳಬೇಕು.
ಸಭೆಯಲ್ಲಿ ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ ಪ್ರಸಾದ್, ಅರಣ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ಎಂ.ಎಸ್.ಶ್ರೀಕರ್, ಮೈಸೂರು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.