ಬೆಂಗಳೂರು: ಯೋಗದ ಮಹತ್ವವನ್ನು ವಿಶ್ವಕ್ಕೆ ಸಾರುವ ನಿಟ್ಟಿನಲ್ಲಿ ಇದೇ ಮೊದಲ ಬಾರಿಗೆ 5 ಲಕ್ಷ ಜನರು ಸೇರಿ ಆ.28 ರಂದು ಕ್ರೀಡಾ ದಿನಾಚರಣೆ ಅಂಗವಾಗಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಏಕಕಾಲಕ್ಕೆ ‘ಯೋಗಥಾನ್’ ನಡೆಸಲಿದ್ದು, ಗಿನ್ನೀಸ್ ವಿಶ್ವದಾಖಲೆ ಮಾಡುವ ನಿಟ್ಟಿನಲ್ಲಿ ಪ್ರಯತ್ನ ಮಾಡಲಾಗುತ್ತಿದೆ ಎಂದು ರೇಷ್ಮೆ, ಯುವಸಬಲೀಕರಣ ಮತ್ತು ಕ್ರೀಡಾ ಸಚಿವರಾದ ಡಾ. ಕೆ.ಸಿ. ನಾರಾಯಣ ಗೌಡ ಹೇಳಿದ್ದಾರೆ.
ಶ್ರೀ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಷ್ಟ್ರೀಯ ಸೇವಾ ಯೋಜನೆ, ನೆಹರು ಯುವ ಕೇಂದ್ರ ಸಂಘಟನ್, ಆಯುಷ್ ಇಲಾಖೆ, ಕರ್ನಾಟಕ ಯೋಗಾಸನ ಕ್ರೀಡಾ ಸಂಸ್ಥೆ ಮತ್ತು ಆಯುಷ್ ಟಿ.ವಿ ಪ್ರೈ.ಲಿ. ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ಯೋಗಥಾನ್-2022 ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಯೋಗದಲ್ಲಿ ಭಾರತವು ವಿಶ್ವದಲ್ಲೇ ಮೊದಲೇ ಸ್ಥಾನದಲ್ಲಿ ಇದ್ದು, ಯೋಗಿಗಳು ನೀರನ್ನೂ ಕುಡಿಯದೇ ಯೋಗಕ್ಕೆ ಶಕ್ತಿ ತುಂಬಿದರು. ಯೋಗದ ತವರೂರಾದ ಭಾರತ ಅದರಲ್ಲೂ ಕರ್ನಾಟಕದಲ್ಲಿ ಯೋಗವನ್ನು ಮನೆ ಮನೆಗೆ ತಲುಪಿಸುವ ಉದ್ದೇಶ ಹೊಂದಲಾಗಿದೆ. ಇಡೀ ವಿಶ್ವಕ್ಕೆ ಶಕ್ತಿ ತುಂಬುವ ಕೆಲಸವನ್ನು ಕರ್ನಾಟಕದಿಂದ ಆರಂಭಿಸೋಣ. ಯೋಗಕ್ಕೆ ಕ್ರೀಡೆಯ ಮಾನ್ಯತೆ ನೀಡಿ ಇದೇ ಮೊದಲ ಬಾರಿಗೆ ಖೇಲೋ ಇಂಡಿಯಾ ಯುನಿವರ್ಸಿಟಿ ಗೇಮ್ಸ್ ನಲ್ಲಿ ಸೇರಿಸಲಾಗಿದೆ. ಯೋಗಕ್ಕೆ ಶಕ್ತಿ ತುಂಬುವ ಕೆಲಸವನ್ನು ಮಾಡೋಣ ಎಂದರು.
ಈ ಯೋಗಥಾನ್ಗೆ ಖ್ಯಾತ ಚಲನಚಿತ್ರ ನಟ ರಮೇಶ ಅರವಿಂದ್ ಅವರು ಬ್ಯಾಂಡ್ ಅಂಬಾಸಿಡರ್ ಆಗಿದ್ದಾರೆ. ನಮ್ಮ ಸರ್ಕಾರದ ಈ ಪ್ರಯತ್ನಕ್ಕೆ ವ್ಯಾಪಕ ಪ್ರೋತ್ಸಾಹ ಸಿಗುತ್ತಿದ್ದು, ಎಲ್ಲಾ ಜನರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ಕೋರಿದರು.
ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತರಾದ ಡಾ. ಹೆಚ್.ಎನ್. ಗೋಪಾಲಕೃಷ್ಣ ಅವರು ಮಾತನಾಡಿ ಯೋಗಾಭ್ಯಾಸ, ಯೋಗಾಸನ ಕೇವಲ ಯೋಗ ದಿವಸಕ್ಕೆ ಸೀಮಿತವಾಗದೇ ದೈನಂದಿನ ಚಟುವಟಿಕೆಯ ಒಂದು ಭಾಗವಾಗಬೇಕು ಎಂದು ಅಭಿಪ್ರಾಯಪಟ್ಟರು.
ಎಲ್ಲಾ ಇಲಾಖೆಗಳ ಸಹಯೋಗದಲ್ಲಿ ನಿರಂತರವಾಗಿ 2 ತಿಂಗಳ ಕಾಲ ಯೋಗಥಾನ್-2022 ಕಾರ್ಯಕ್ರಮವು ನಡೆಯಲಿದ್ದು, ಈ ನಿಟ್ಟಿನಲ್ಲಿ ಪ್ರತಿ ಭಾನುವಾರ ರಾಜ್ಯಾದ್ಯಂತ ಎಲ್ಲಾ ತಾಲ್ಲೂಕು ಹಾಗೂ ಜಿಲ್ಲಾ ಕೇಂದ್ರಗಳಲ್ಲಿ ಯೋಗ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ. ಯೋಗಾಸನ ಕ್ರೀಡೆ ಎಂದು ಕೇಂದ್ರ ಸರ್ಕಾರ ಈಗಾಗಲೇ ಘೋಷಿಸಿದ್ದು, ಎಲ್ಲಾ ತಾಲ್ಲೂಕು ಹಾಗೂ ಜಿಲ್ಲಾ ಕ್ರೀಡಾಂಗಣದಲ್ಲಿ ಪ್ರತಿದಿನ ಬೆಳಗ್ಗೆ 6ರಿಂದ 8.30 ರವರೆಗೂ ಯೋಗಾಭ್ಯಾಸಕ್ಕೆ ಅವಕಾಶ ಕಲ್ಪಿಸಲಾಗಿದೆ.
ಆ.೨೮ರಂದು ರಾಷ್ಟ್ರೀಯ ಕ್ರೀಡಾ ದಿನಚಾರಣೆ ಅಂಗವಾಗಿ ರಾಜ್ಯಾದ್ಯಂತ ಸುಮಾರು 5 ಲಕ್ಷಕ್ಕೂ ಹೆಚ್ಚು ಸಾರ್ವಜನಿಕರನ್ನು ಹಾಗೂ ಯೋಗ ಆಸಕ್ತರನ್ನು ಒಂದೇ ಕಡೆ ಸೇರಿಸಿ ಏಕಕಾಲದಲ್ಲಿ ಯೋಗಾಭ್ಯಾಸ ಮಾಡುವ ಮೂಲಕ ವಿಶ್ವದಾಖಲೆಯನ್ನು ಮಾಡುವ ಪ್ರಯತ್ನ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಈ ಸಮಾರಂಭದಲ್ಲಿ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್, ಎ.ಎಸ್.ಆರ್.ಟಿ.ಡಿ, ಮಿರಾಕಲ್ ಡ್ರಿಂಕ್ಸ್ ಎಸ್ .ಎಂ ರಾಜು, ಕರ್ನಾಟಕ ಯೋಗಾಸನ ಕ್ರೀಡಾ ಸಂಸ್ಥೆಯ ಕಾರ್ಯದರ್ಶಿಗಳು ಡಾ. ಎಂ.ನಿರಂಜನ ಮೂರ್ತಿ ಹಾಗೂ ಇತರರು ಉಪಸ್ಥಿತರಿದ್ದರು.