ಬೆಂಗಳೂರು: ಪೋಕ್ಸೋ ಕೇಸ್ನಲ್ಲಿ ಬಂಧನದ ಭೀತಿ ಎದುರಿಸುತ್ತಿದ್ದ ಮಾಜಿ ಸಿಎಂ ಯಡಿಯೂರಪ್ಪಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ಕೊಟ್ಟಿದೆ. ಬಂಧನಕ್ಕೆ ತಡೆ ನೀಡಿರುವ ಕೋರ್ಟ್, ಸೋಮವಾರ ವಿಚಾರಣೆಗೆ ಹಾಜರಾಗಲು ಬಿಎಸ್ವೈಗೆ ಸೂಚಿಸಿದೆ. ಯಡಿಯೂರಪ್ಪ ಅವರ ಮೇಲಿನ ಕರುನಾಡ ಜನರ ಆಶೀರ್ವಾದ, ಕೋಟಿ ಹೃದಯಗಳ ಪ್ರಾರ್ಥನೆ ನ್ಯಾಯ ದೇಗುಲದಲ್ಲಿ ಅನಾವರಣಗೊಂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಈ ಕುರಿತಾಗಿ ಟ್ವೀಟ್ ಮಾಡಿರುವ ವಿಜಯೇಂದ್ರ ಅವರು, ಮಾನ್ಯ @BSYBJP ಅವರ ಮೇಲಿನ ಕರುನಾಡ ಜನರ ಆಶೀರ್ವಾದ, ಕೋಟಿ ಹೃದಯಗಳ ಪ್ರಾರ್ಥನೆ ನ್ಯಾಯ ದೇಗುಲದಲ್ಲಿ ಅನಾವರಣಗೊಂಡಿದೆ. ಷಡ್ಯಂತ್ರ, ಪಿತೂರಿ ರಾಜಕಾರಣ ಮಾನ್ಯ @BSYBJP ಅವರ ಹಿಂಬಾಲಿಸಿಕೊಂಡು ಬರುತ್ತಲೇ ಇದೆ, ಎದೆಗುಂದದ ಅವರು ನ್ಯಾಯದ ಹಾದಿಯಲ್ಲಿ ಷಡ್ಯಂತ್ರಗಳನ್ನು ಜಯಿಸಿದ್ದಾರೆ.
ಇಂದು ಉಚ್ಚ ನ್ಯಾಯಾಲಯದಲ್ಲಿ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರಿಗೆ ಘನ ನ್ಯಾಯಾಲಯ ಮಧ್ಯಂತರ ಜಾಮೀನು ನೀಡಿ “ಯಡಿಯೂರಪ್ಪನವರು ವಿಚಾರಣೆಗಳಿಗೆ ಬೆನ್ನು ತೋರಿಸುವ ಜಾಯಮಾನದವರಲ್ಲ” ಎನ್ನುವ ಮಾತನ್ನು ಉಲ್ಲೇಖಿಸಿರುವುದು ಬಿ.ಎಸ್ ಯಡಿಯೂರಪ್ಪನವರು ಈ ನೆಲದ ಕಾನೂನಿಗೆ ಗೌರವ ಕೊಡುವ ಪರಿಯನ್ನು ಸಾಕ್ಷೀಕರಿಸಿದೆ. ಮುಂದಿನ ದಿನಗಳಲ್ಲಿ ನ್ಯಾಯ ದೇಗುಲದಲ್ಲಿ ಸತ್ಯವೇ ಗೆಲ್ಲುತ್ತದೆಂಬ ಅಚಲ ವಿಶ್ವಾಸ ನಮ್ಮದಾಗಿದೆ ಎಂದು ಹೇಳಿದ್ದಾರೆ.
https://x.com/BYVijayendra/status/1801592162976731171