ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ, ಖಾಸಗಿ ಸಾರಿಗೆ ಸಂಘಟನೆಗಳು ಕರೆ ಕೊಟ್ಟ ಬೆಂಗಳೂರು ಬಂದ್ ನಿಂದಾಗಿ ಜನ ಸಾಮಾನ್ಯರು ಪರದಾಡುವಂತಾಗಿದೆ. ನಗರದ ಮೆಜೆಸ್ಟಿಕ್ ಸುತ್ತಮುತ್ತ ಆಟೋ, ಟ್ಯಾಕ್ಸಿ, ಬಸ್ ಗಳಿಗೆ ಪ್ರಯಾಣಿಕರು ಕಾದು ಕಾದು ಸುಸ್ತಾದ ದೃಶ್ಯಗಳು ಕಂಡುಬರುತ್ತಿದೆ.
ದೂರದ ಊರುಗಳಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರು ಬೆಳಗ್ಗೆ ಆಟೋ, ಟ್ಯಾಕ್ಸಿ ಇಲ್ಲದೆ ಕಷ್ಟ ಅನುಭವಿಸುವಂತಾಯಿತು. ಹೆಚ್ಚುವರಿ ಬಸ್ ಸೌಲಭ್ಯವನ್ನು ಸಾರಿಗೆ ಇಲಾಖೆ ಒದಗಿಸಿದರೂ ಹಲವು ಪ್ರಯಾಣಿಕರು ತಲುಪಬೇಕಾದ ಸ್ಥಳಗಳಿಗೆ ಸಾರಿಗೆ ವ್ಯವಸ್ಥೆ ಇರಲಿಲ್ಲ.
ಬಂದ್ ಹಿನ್ನಲೆಯಲ್ಲಿ ಮೆಟ್ರೋ ನಿಲ್ದಾಣ, ಬಿಎಂಟಿಸಿ ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಸಂಖ್ಯೆ ವಿಪರೀತವಾಗಿತ್ತು. ಬಸ್ ಸಿಗದ ಪ್ರಯಾಣಿಕರು ನಡೆದುಕೊಂಡೇ ಹೋಗುತ್ತಿದ್ದ ದೃಶ್ಯಗಳು ಸಾಮಾನ್ಯವಾಗಿತ್ತು. ಈ ನಡುವೆ ಬಂದ್ ಕುರಿತು ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಹಿಳೆಯರಿಗೆ ಅನುಕೂಲವಾಗಲಿ ಎಂದು ‘ಶಕ್ತಿ’ ಯೋಜನೆಯನ್ನು ಜಾರಿಗೆ ತರಲಾಗಿದೆ. ಇದರಿಂದ ಖಾಸಗಿ ಬಸ್ ನವರು ನಷ್ಟ ಎನ್ನುತ್ತಿದ್ದಾರೆ. ಆ ನಷ್ಟವನ್ನು ತುಂಬಿಕೊಡಿ ಎಂಬ ಬೇಡಿಕೆಯನ್ನು ಸರ್ಕಾರದ ಮುಂದಿಟ್ಟಿದ್ದಾರೆ. ಖಾಸಗಿಯವರಿಗೆ ಆಗುವ ನಷ್ಟ ತುಂಬಿಕೊಡಲು ಆಗಲ್ಲ. ಅಸಾಧ್ಯವಾದ ಬೇಡಿಕೆ ಈಡೇರಿಸಲು ಸಾಧ್ಯವಿಲ್ಲ ಎಂದಿದ್ದಾರೆ.
ಬಂದ್ ಮಾಡಲು ಎಲ್ಲರಿಗೂ ಹಕ್ಕಿದೆ. ಪ್ರತಿಭಟನೆ ಮಾಡಲು ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಹಕ್ಕಿದೆ. ಆದರೆ, ಯಾವುದೇ ತೊಂದರೆಯಾಗದೆ ಶಾಂತಯುತವಾಗಿ ಪ್ರತಿಭಟನೆ ಮಾಡಲಿ ಎಂದು ಅವರು ತಿಳಿಸಿದ್ದಾರೆ.
ಮತ್ತೊಂದೆಡೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಖಾಸಗಿ ಸಾರಿಗೆ ಒಕ್ಕೂಟಗಳಿಂದ ನಡೆಸಲಾಗುತ್ತಿರುವ ಬಂದ್ ರಾಜಕೀಯ ಪ್ರೇರಿತವಾಗಿದ್ದು, ಹೋರಾಟ ಮಾಡುವ ಅವಶ್ಯಕತೆ ಇರಲಿಲ್ಲ ಎಂದಿದ್ದಾರೆ.
ಕಳೆದ ನಾಲ್ಕು ವರ್ಷಗಳಿಂದಲೂ ಸಾರಿಗೆ ಸಂಸ್ಥೆಗಳ ಬೇಡಿಕೆಗಳಿವೆ. ಕಾಂಗ್ರೆಸ್ ಸರ್ಕಾರ ಟ್ಯಾಕ್ಸ್ ಹೆಚ್ಚಳ ಮತ್ತು ಶಕ್ತಿ ಯೋಜನೆ ಜಾರಿಗೆ ತಂದಿದೆ. ಖಾಸಗಿಯವರ ಬೇಡಿಕೆ ಈಡೇರಿಕೆ ಸಂಬಂಧ ಯಾರೋ ಅಧಿಕಾರಿ ಏನೋ ಹೇಳಿದ್ದಾರೆ ಎಂದು ಸಿಎಂ ಜೊತೆಗಿನ ಸಭೆಯಲ್ಲಿ ಒಕ್ಕೂಟದ ಪ್ರತಿನಿಧಿಗಳು ಭಾಗವಹಿಸಲಿಲ್ಲ. ಕಾನಾನೂತ್ಮ ಬೇಡಿಕೆ ಈಡೇರಿಸಲು ಸರ್ಕಾರ ಬದ್ಧವಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.