ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಬೆಂಗಳೂರು ಬಂದ್ ಮಾಡಿ ರೈತ ಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಬೆಂಗಳೂರಿನಾದ್ಯಂತ ಪ್ರತಿಭಟನೆಯ ಕಾವು ಹೆಚ್ಚಾಗುತ್ತಿದೆ. ನಗರದ ಫ್ರೀಡಂಪಾರ್ಕ್ನಲ್ಲಿ ರೈತ ಪರ ಸಂಘಟನೆಗಳು ಧರಣಿ ನಡೆಸುತ್ತಿದ್ದು ಈ ವೇಳೆ ರೈತನೋರ್ವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ತಕ್ಷಣ ರೈತನನ್ನು ರಕ್ಷಿಸಿ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದ್ದು ಪ್ರತಿಭಟನಾನಿರತ ರೈತರನ್ನು ವಶಕ್ಕೆ ಪಡೆದಿದ್ದಾರೆ.
ಮತ್ತೊಂದೆಡೆ ಯಾವುದೇ ಬಂದ್ಗೆ ನಮ್ಮ ಬೆಂಬಲ ಇಲ್ಲ ಎಂದು ಬೆಂಗಳೂರಿನಲ್ಲಿ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಹೇಳಿಕೆ ನೀಡಿದ್ದಾರೆ. ಕನ್ನಡ ಭಾಷೆ, ನೆಲ, ಜಲದ ವಿಚಾರವಾಗಿ ನನ್ನ ಹೋರಾಟ ಮುಂದುವರಿಯುತ್ತೆ. ಬಂದ್ ನಿಂದ ಜನ ಸಾಮಾನ್ಯರಿಗೆ ತೊಂದರೆ ಆಗುತ್ತೆ ಎಂದಿದ್ದಾರೆ.
ʼಕರ್ನಾಟಕ ಜಲ ಸಂರಕ್ಷಣಾ ಸಮಿತಿ ಬೆಂಗಳೂರು’ ಸಂಘಟನೆ ನೇತೃತ್ವದಲ್ಲಿ ಬೆಳಗ್ಗೆ 6 ರಿಂದ ಸಂಜೆ 6 ಗಂಟೆವರೆಗೆ ಬಂದ್ ಇರಲಿದೆ. ಇದಕ್ಕೆ ಕನ್ನಡಪರ, ರೈತಪರ ಸಂಘಟನೆಗಳು, ಸಾರಿಗೆ, ಶಿಕ್ಷಕರ ಸಂಘಟನೆಗಳು, 150ಕ್ಕೂ ಹೆಚ್ಚಿನ ಸಂಘ ಸಂಸ್ಥೆಗಳು ಪೂರ್ಣ ಬೆಂಬಲ ನೀಡಿವೆ.ಇನ್ನು ಮಧ್ಯರಾತ್ರಿಯಿಂದಲೇ ನಗರದಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ. ಪೊಲೀಸ್ ಬಿಗಿ ಬಂದೋಬಸ್ಥ್ ಮಾಡಲಾಗಿದೆ.