ಬೆಂಗಳೂರು: ಕರ್ನಾಟಕಕ್ಕೆ ಬರದ ಹೊಡೆತದ ಮಧ್ಯೆಯೇ ಭಾರಿ ಆಘಾತ ಎದುರಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಬರದ ಛಾಯೆ ಆವರಿಸಿದೆ. ರೈತರು ಕೂಡ ನೀರಿಗಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಮಧ್ಯೆ ತಮಿಳುನಾಡಿಗೆ ನೀರು ಹರಿಸಲು ಕಾವೇರಿ ನೀರು ನಿಯಂತ್ರಣ ಸಮಿತಿ ಕರ್ನಾಟಕಕ್ಕೆ ಮತ್ತೆ ಆದೇಶ ನೀಡಿದೆ.
ನಿನ್ನೆ ಸಭೆ ನಡೆಸಿದ ಕಾವೇರಿ ನೀರು ನಿಯಂತ್ರಣ ಸಮಿತಿ ನಿತ್ಯ ಐದು ಸಾವಿರ ಕ್ಯೂಸೆಕ್ ನಂತೆ ಹದಿನೈದು ದಿನಗಳ ಕಾಲನೀರು ಹರಿಸಲು ಶಿಫಾರಸ್ಸು ಮಾಡಿದೆ. ಈ ಆದೇಶ ಬೆನ್ನಲ್ಲೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಸರ್ವ ಪಕ್ಷಗಳ ತುರ್ತು ಸಭೆ ಕರೆದಿದ್ದಾರೆ.
ಇಂದು ವಿಧಾನಸೌಧದಲ್ಲಿ ಮಧ್ಯಾಹ್ನ 12.30ಕ್ಕೆ ಸಭೆ ನಡೆಯಲಿದೆ. ಡಿಸಿಎಂ ಡಿ.ಕೆ.ಶಿವಕುಮಾರ್, ಕಾವೇರಿ ಜಲಾನಯನ ಪ್ರದೇಶ ವ್ಯಾಪ್ತಿ ಸಚಿವರುಗಳು, ರಾಜ್ಯ ಸಚಿವ ಸಂಪುಟದ ಹಿರಿಯ ಸಚಿವರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಪ್ರತಿಪಕ್ಷಗಳ ಮಾಜಿ ಸಿಎಂಗಳು, ಲೋಕಸಭೆ ರಾಜ್ಯ ಸಭೆ ಸದಸ್ಯರುಗಳಿಗೂ ತುರ್ತು ಸಭೆಯಲ್ಲಿ ಭಾಗವಹಿಸಲು ಆಹ್ವಾನ ನೀಡಲಾಗಿದೆ.