ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಬಿಜೆಪಿ ವತಿಯಿಂದ ‘ಕಾವೇರಿ ರಕ್ಷಣಾ ಯಾತ್ರೆ’ ನಡೆಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯದ ಕಾವೇರಿ ಕೊಳ್ಳದ ತಾಲೂಕುಗಳಲ್ಲಿ ಯಾತ್ರೆ ಆಯೋಜಿಸಲಾಗುವುದು ಎಂದು ವಿವರಿಸಿದರು.
ಬಳಿಕ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕಾವೇರಿ ವಿಚಾರದಲ್ಲಿ ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದರು. ಪಾದಯಾತ್ರೆ ಜತೆಗೆ ಧರಣಿ ನಡೆಯಲಿದೆ, ರಾಜ್ಯದ ರೈತರಿಗೆ ಶೇ.30 ರಷ್ಟು ನೀರು ಕೂಡ ಬಿಡುಗಡೆ ಮಾಡಿಲ್ಲ, ಮತ್ತೊಂದೆಡೆ ತಮಿಳುನಾಡು ರೈತರು ಎರಡನೇ ಬೆಳೆ ಬೆಳೆಯುತ್ತಿದ್ದಾರೆ ಎಂದರು.
“ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (ಸಿಡಬ್ಲ್ಯುಎಂಎ) ಮುಂದೆ ಸಮರ್ಥ ವಾದ ಮಂಡಿಸಲು ನಮ್ಮ ಸರ್ಕಾರ ವಿಫಲವಾಗಿದೆ. ನಮ್ಮ ರೈತರ ಹಿತಾಸಕ್ತಿಗಳನ್ನು ಬಲಿಕೊಟ್ಟು ರಾಜ್ಯ ಸರ್ಕಾರ ತಮಿಳುನಾಡಿಗೆ ಎರಡನೇ ಬೆಳೆಗೆ ನೀರು ಬಿಡುಗಡೆ ಮಾಡಿದೆ. ಸರ್ಕಾರವು ಸುಪ್ರೀಂ ಕೋರ್ಟ್ಗೆ ಪರಿಸ್ಥಿತಿ ಮನವರಿಕೆ ಮಾಡಲು ವಿಫಲವಾಗಿದೆ ಎಂದು ಯಡಿಯೂರಪ್ಪ ಹೇಳಿದರು.
ಕಾವೇರಿ ಜಲಾನಯನ ಪ್ರದೇಶದಲ್ಲಿ ಸರಿಯಾದ ಸಮಯಕ್ಕೆ ನೀರು ಬಿಡದ ಕಾರಣ ಕಾವೇರಿ ಜಲಾನಯನ ಪ್ರದೇಶದಲ್ಲಿನ ಬೆಳೆಗಳು ಒಣಗಿ ಹೋಗಿದ್ದು, ರಾಜ್ಯ ಸರ್ಕಾರ ಈ ಭಾಗದ ಪ್ರತಿಯೊಬ್ಬ ರೈತರಿಗೆ ಎಕರೆಗೆ 25 ಸಾವಿರ ರೂಪಾಯಿ ಪರಿಹಾರ ನೀಡಬೇಕು ಎಂದು ಬೊಮ್ಮಾಯಿ ಹೇಳಿದರು.