ಚಿಕ್ಕಬಳ್ಳಾಪುರ: ಆಟೋ ಹಾಗೂ ಕ್ಯಾಂಟರ್ ನಡುವೆ ಭೀಕರ ಅಪಘಾತ ಸಂಭವಿಸಿ ಆರು ಮಂದಿ ಕಾಲೇಜು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಗೌರಿಬಿದನೂರು ನಗರದ ನಾಗಪ್ಪ ಬ್ಲಾಕ್ ಬಳಿ ನಡೆದಿದೆ. ಆಟೋದಲ್ಲಿ ಚಾಲಕ ಸೇರಿ ಒಟ್ಟು 12 ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದರು. ಇದರಲ್ಲಿ ಮೂವರು ವಿದ್ಯಾರ್ಥಿನಿಯರ ಸ್ಥಿತಿ ಚಿಂತಾಜನಕವಾಗಿದೆ. ವಿಧುರಾಶ್ವಥದಿಂದ ಗೌರಿಬಿದನೂರಿಗೆ ಬರುವ ವೇಳೆ ದುರ್ಘಟನೆ ಸಂಭವಿಸಿದೆ. ವಿದ್ಯಾರ್ಥಿಗಳು ಗೌರಿಬಿದನೂರಿನ ಕಾಲೇಜಿಗೆ ತೆರಳುತಿದ್ದರು.
ಕ್ಯಾಂಟರ್ ಡಿಕ್ಕಿ ಹೊಡೆದ ರಭಸಕ್ಕೆ ಆಟೋ ಛಿದ್ರಗೊಂಡಿದೆ. ಗಾಯಾಳುಗಳನ್ನು ಗೌರಿಬಿದನೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿರುವ ಮೂವರು ವಿದ್ಯಾರ್ಥಿನಿಯರನ್ನು ಹೆಚ್ಚಿನ ಚಿಕಿತ್ಸೆಗಾಗಿ ಗೌರಿಬಿದನೂರಿನಿಂದ ಬೆಂಗಳೂರಿಗೆ ರವಾನೆ ಮಾಡಲಾಗಿದೆ. ಇನ್ನು ದುರ್ಘಟನಾ ಸ್ಥಳಕ್ಕೆ ಗೌರಿಬಿದನೂರು ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.