ಚಿಕ್ಕಬಳ್ಳಾಪುರ: ದುರ್ಗೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಮಾರರೆಡ್ಡಿಯನ್ನು ಗಡಿಪಾರು ಮಾಡಬೇಕು ಹಾಗೂ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ ತಾಲೂಕಿನ ದಲಿತಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು.
ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದ ಮುಖಂಡರು, ತಾಲೂಕಿನಲ್ಲಿ ದಲಿತರ ಮೇಲಿನ ಕೊಲೆಗಡುಕ ಸಂಸ್ಕೃತಿ ಮರುಕಳಿಸದಂತೆ ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತ ಸೂಕ್ತ ಕ್ರಮ ಕೈಗೊಳ್ಳಬೇಕು, ದಲಿತ ಯುವಕ ದುರ್ಗೇಶ್ ಕೊಲೆ ಪ್ರಕರಣದ ಆರೋಪಿಗಳನ್ನು ಗಡಿಪಾರು ಮಾಡಬೇಕು ಮತ್ತು ಜಾತಿ ನಿಂದನೆ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದರು.
ದುರ್ಗೇಶ್ ಅವರ ಪತ್ನಿಗೆ ಸರ್ಕಾರಿ ಉದ್ಯೋಗ ಮತ್ತು 25 ಲಕ್ಷ ರೂ.ಗಳ ನಗದು ಪರಿಹಾರನೀಡಬೇಕು ಎಂದು ಅವರು ಒತ್ತಾಯಿಸಿದರು. ಈ ಬಗ್ಗೆ ತನಿಖೆ ನಡೆಸಲು ಕೂಡಲೇ ವಿಶೇಷ ತಂಡ ರಚಿಸಬೇಕು, ತಾಲೂಕಿನ ಕೆಂಪದೇನಹಳ್ಳಿಯಲ್ಲಿ 9ನೇ ತರಗತಿ ಓದುತ್ತಿದ್ದ ಬಾಲಕನ ಮೇಲೆ ಕಳ್ಳತನದ ಆರೋಪದ ಮೇಲೆ ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿದವರಿಗೆ ಶಿಕ್ಷೆ ವಿಧಿಸಬೇಕು ಮತ್ತು ಪಾಲೆಪಲ್ಲಿ ಗ್ರಾಮದಲ್ಲಿ ಜಾತ್ರೆ ವೇಳೆ ವಾಲ್ಮೀಕಿ ಯುವಕನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳು ದಾಖಲಾದ ಕೂಡಲೇ ಆರೋಪಿಗಳನ್ನು ಬಂಧಿಸಬೇಕು. ಸಂತ್ರಸ್ತರಿಗೆ ರಕ್ಷಣೆ ನೀಡಬೇಕು ಮತ್ತು ಪರಿಹಾರ ನೀಡಬೇಕು. ದೌರ್ಜನ್ಯ ಪ್ರಕರಣಗಳ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ದಲಿತ ಪರ ಸಂಘಟನೆಗಳ ಒಕ್ಕೂಟದಿಂದ ಆಯೋಜಿಸಿದ್ದ ಬೃಹತ್ ಪ್ರತಿಭಟನಾ ಮೆರವಣಿಗೆ ಪಟ್ಟಣದ ಎಪಿಎಂಸಿ ಟೊಮೆಟೊ ಮಾರುಕಟ್ಟೆ ಬಳಿಯಿಂದ ಆರಂಭಗೊಂಡು ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ನಂತರ ಪ್ರತಿಭಟನಾಕಾರರು ತಾಲ್ಲೂಕು ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಶೋಭಾ ಅವರ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.