ಬೆಂಗಳೂರು: ಚಿಕ್ಕೋಡಿಯ ಜೈನ ಮುನಿ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರ ಭೀಕರ ಹತ್ಯೆ ಖಂಡನೀಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ.
ಈ ಸಂಬಂಧ ಮಾಧ್ಯಮ ಪ್ರಕಟಣೆಯನ್ನು ನಳಿನ್ ಕುಮಾರ್ ಕಟೀಲ್ ಹೊರಡಿಸಿದ್ದು, ಈ ಹತ್ಯೆಯ ಸಮಗ್ರ ತನಿಖೆ ನಡೆಸಬೇಕು. ಕೊಲೆಗಡುಕರನ್ನು ಶೀಘ್ರವೇ ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಮುನಿಗಳ ಹತ್ಯೆ ಮನಸ್ಸಿಗೆ ಅತ್ಯಂತ ಅಘಾತ ತಂದಿದೆ ಎಂದು ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ನಾಡಿನ ಸಾಧು ಸಂತರಿಗೆ ರಕ್ಷಣೆ ಒದಗಿಸುವಂತೆ ಅವರು ಆಗ್ರಹಿಸಿದ್ದಾರೆ. ರಾಜ್ಯ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು ಕೊಲೆಗಡುಕರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದಿದ್ದಾರೆ.
ಸಾಧು, ಸಂತರು ಶಾಂತಿಪ್ರಿಯರು. ದೇಶದ ಒಳಿತು, ಸಂಸ್ಕಾರ, ಸನಾತನ ಧರ್ಮದ ವಿಚಾರವಾಗಿ ಮಾರ್ಗದರ್ಶನ ನೀಡುವವರು. ಅಂತಹ ಸಂತರನ್ನು ಹೇಯವಾಗಿ ಕೊಲೆ ಮಾಡಿರುವುದನ್ನು ಸಮಾಜ ಒಪ್ಪಲು ಸಾಧ್ಯವೇ ಇಲ್ಲ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.