ಚಿತ್ರದುರ್ಗ: ಪಿಎಸ್ಐ ಹಗರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 25 ಜನರನ್ನ ಬಂಧಿಸಲಾಗಿದೆ. ತನಿಖೆಯು ನಡೆಯುತ್ತಿದೆ, ತಪ್ಪಿತಸ್ಥರು ಯಾರೇ ಇದ್ದರೂ ಕೂಡ ಕ್ರಮ ಕೈಗೊಳ್ಳುತ್ತೇವೆ. ಈ ಬಗ್ಗೆ ಗೃಹ ಸಚಿವರು ರಾಜೀನಾಮೆ ಕೊಡುವ ಅಗತ್ಯ ಇಲ್ಲ ಎಂದು ಬೃಹತ್ ಮತ್ತು ಸಣ್ಣ ನೀರಾವರಿ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ.
ಈ ಕುರಿತು ಚಿತ್ರದುರ್ಗದಲ್ಲಿ ಮಾತನಾಡಿದ ಅವರು “ಕಾಂಗ್ರೆಸ್ ನಾಯಕರು ದೇಶದಲ್ಲಿ ಮತ್ತು ರಾಜ್ಯದಲ್ಲಿ 56ವರ್ಷ ಆಡಳಿತ ನಡೆಸಿದ್ದಾರೆ. ಸಿದ್ದರಾಮಯ್ಯ ಕೂಡ 5 ವರ್ಷ ಮುಖ್ಯಮಂತ್ರಿಯಾಗಿ ಹೇಳಿಕೊಳ್ಳುವಂತ ಸಾಧನೆ ಮಾಡಿಲ್ಲ. ಹೀಗಾಗಿ ಅವರು ಜನರ ದಾರಿ ತಪ್ಪಿಸುವಂತ ಹೇಳಿಕೆ ಕೊಡುತ್ತಿದ್ದಾರೆ. ಈ ಹಿಂದೆ ಕೂಡ ಈ ರೀತಿಯ ಅಕ್ರಮಗಳು ನಡೆದಿರುವ ಬಗ್ಗೆ ವರದಿಯಾಗಿದೆ. ಹೀಗಾಗಿ ಸಂಪೂರ್ಣವಾಗಿ ತನಿಖೆ ನಡೆಯಲಿ. ತಪ್ಪಿತಸ್ಥರು ಯಾರೇ ಆಗಿದ್ದರೂ ಕ್ರಮ ತೆಗೆದುಕೊಳ್ಳುತ್ತೇವೆ. ಬಿಜೆಪಿ ಮಂತ್ರಿಯೊಬ್ಬರಿಗೆ ಹಣ ತಲುಪಿದೆ ಎಂಬುದು ಸಾಬೀತಾಗಿಲ್ಲ. ತನಿಖೆ ವೇಳೆ ತಪ್ಪು ಕಂಡು ಬಂದರೆ ಕಾನೂನು ಎಲ್ಲರಿಗೂ ಒಂದೇ. ತಪ್ಪಿತಸ್ಥರು ಯಾರನ್ನೂ ರಕ್ಷಿಸುವ ಪ್ರಮೇಯವಿಲ್ಲ” ಎಂದು ಹೇಳಿದ್ದಾರೆ.
ಇನ್ನುಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯ ಕುರಿತಾಗಿ ಪ್ರತಿಕ್ರಿಯಿಸಿದ ಅವರು “ನಾಯಕತ್ವ ಬದಲಾವಣೆ ಕುರಿತ ಸಂತೋಷ್ ಜೀ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ಸಿಎಂ ಬೊಮ್ಮಾಯಿಯವರು ಉತ್ತಮವಾಗಿ ಆಳ್ವಿಕೆ ನಡೆಸುತ್ತಿದ್ದಾರೆ. ಗಾಳಿ ಸುದ್ದಿಗಳಿಗೆ ತಲೆಕೆಡಿಸಿಕೊಳ್ಳಬೇಕಾದ ಅಗತ್ಯವಿಲ್ಲ.” ಎಂದಿದ್ದಾರೆ.
ಬೆಳಗಾವಿಯಲ್ಲಿ ಎಂಇಎಸ್ ಕಾರ್ಯಕರ್ತರ ಪುಂಡಾಟದ ವಿಚಾರವಾಗಿ ಮಾತನಾಡಿದ ಅವರು ಗಡಿ ಸಮಸ್ಯೆಯನ್ನು ಎಂಇಎಸ್ ನವರೇ ಹುಟ್ಟು ಹಾಕಿದ್ದಾರೆ. ಬೆಳಗಾವಿ ಯಾವತ್ತೂ ಕೂಡ ಕರ್ನಾಟಕಕ್ಕೆ ಸೇರಿದ್ದು ಎಂದು ಹೇಳಿದ್ದಾರೆ.