ಚಿತ್ರದುರ್ಗ: ವಿವಿಧ ಮಠಾಧೀಶರು ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಅವರೊಬ್ಬ ಶ್ರೇಷ್ಠ ನಾಯಕ ಆಗಿದ್ದು ನಾಲ್ಕು ಭಾರಿ ಮುಖ್ಯಮಂತ್ರಿಯಾಗಿದ್ದಾರೆ. ಕೊರೊನಾ ಸಂದರ್ಭದಲ್ಲಿ ಉತ್ತಮ ಕೆಲಸ ಮಾಡಿದ್ದಾರೆ ಎಂದು ಮುರುಘಾ ಶ್ರೀಗಳು ಹೇಳಿದರು. ಯಡಿಯೂರಪ್ಪ ಜಾತಿಯಿಂದ ಲಿಂಗಾಯತರು. ಆದರೆ ಅವರು ಮಾಸ್ ಲೀಡರ್ ಆಗಿದ್ದು ಯಾವುದೇ ಒಂದು ಜಾತಿಗೆ ಸೀಮಿತವಾಗಿಲ್ಲ. ಯಡಿಯೂರಪ್ಪ ಎಲ್ಲಾ ವರ್ಗದ ಜನರ ವಿಶ್ವಾಸ ಗಳಿಸಿದ್ದಾರೆ ಅಲ್ಲದೆ ಕಾಂಗ್ರೆಸ್ ನಾಯಕರು ಸಹ ಬಿಎಸ್ವೈ ಪರ ಇದ್ದಾರೆ ಎಂದು ಡಾ.ಶಿವಮೂರ್ತಿ ಮುರುಘಾ ಶರಣರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾದಾರ ಮಠದ ಬಸವಮೂರ್ತಿ ಮಾದಾರ ಚನ್ನಯ್ಯ ಶ್ರೀಗಳು, ಬೋವಿ ಮಠದ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ, ಕುಂಚಿಟಿಗ ಮಠದ ಶಾಂತವೀರ ಮಹಾಸ್ವಾಮೀಜಿ, ಶಿರಸಿ ಮಠದ ಮಲ್ಲಿಕಾರ್ಜುನ ಸ್ವಾಮೀಜಿ, ಅಥಣಿ ಮಠದ ಶಿವಬಸವ ಶ್ರೀಗಳು ಸೇರಿ ವಿವಿಧ ಮಠಾಧೀಶರು ಭಾಗಿಯಾಗಿದ್ದರು.
ಯಡಿಯೂರಪ್ಪಗೆ ನಾವು ಸಂಪೂರ್ಣ ಬೆಂಬಲ ಕೊಡುತ್ತಿದ್ದೇವೆ. ಅವರು ಅಧಿಕಾರಾವಧಿಯನ್ನ ಪೂರ್ಣಗೊಳಿಸಲಿ ಎಂದು ಮಾದಾರ ಚನ್ನಯ್ಯ ಸ್ವಾಮೀಜಿ ಹೇಳಿದರು.