ಚಿತ್ರದುರ್ಗ: ಸಾರಿಗೆ ಇಲಾಖೆಯಲ್ಲಿ ಸಂಪೂರ್ಣ ಬದಲಾವಣೆಯಾಗಿದ್ದು, ಪರಿಸರ ಸ್ನೇಹಿ ಎಲೆಕ್ಟ್ರಿಕ್ ಬಸ್ ಗಳ ಖರೀದಿಗೆ ಕ್ರಮ ಕೈಗೊಳ್ಳಲಾಗಿದೆ. 2030ರ ವೇಳೆಗೆ ಎಲೆಕ್ಟ್ರಿಕ್ ಬಸ್ ಗಳನ್ನು ಖರೀದಿಸಲಾಗುವುದು ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಹೇಳಿದರು.
ಜಿಲ್ಲೆಯ ಹಿರಿಯೂರಿನ ಹುಳಿಯಾರು ರಸ್ತೆಯ ತಾಲ್ಲೂಕು ಕ್ರೀಡಾಂಗಣದ ಬಳಿ ನೂತನ ಬಸ್ ಘಟಕಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಜನವರಿ ಅಂತ್ಯದೊಳಗೆ 50 ಎಲೆಕ್ಟ್ರಿಕ್, 600 ಡೀಸೆಲ್ ಚಾಲಿತ ಮತ್ತು 60 ವೋಲ್ವೋ ಬಸ್ ಗಳನ್ನು ಖರೀದಿಸಲಾಗುವುದು ಎಂದರು.
ರಸ್ತೆ ಸುರಕ್ಷತೆಗಾಗಿ ಕೇಂದ್ರ ಸರ್ಕಾರ 250 ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ರಾಜ್ಯಾದ್ಯಂತ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಬ್ಲಾಕ್ ಸ್ಪಾಟ್ ಗುರುತಿಸಲಾಗುವುದು. ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್ ಪಾಸ್ ನೀಡಲಾಗಿದೆ ಎಂದರು.