ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ನಗರದಲ್ಲಿ ನಾಲ್ಕೈದು ದಿನಗಳ ಹಿಂದಷ್ಟೇ ಅನಾವರಣಗೊಳಿಸಲಾಗಿದ್ದ ಕುವೆಂಪು ಹಾಗೂ ಪುನೀತ್ ರಾಜ್ಕುಮಾರ್ ಪ್ರತಿಮೆಗಳನ್ನು ರಾತ್ರೋರಾತ್ರಿ ನಗರಸಭೆ ಅಧಿಕಾರಿಗಳು ಪ್ರತಿಮೆಗಳನ್ನು ತೆರವುಗೊಳಿಸಿದ್ದಾರೆ.
ಹಿರಿಯೂರು ನಗರದ ರಂಜಿತಾ ಹೋಟೆಲ್ ಮುಂಭಾಗದಲ್ಲಿ ರಾಷ್ಟ್ರಕವಿ ಕುವೆಂಪು ಪ್ರತಿಮೆ ಹಾಗೂ ಹಿರಿಯೂರು ಇಂದಿರಾ ಕ್ಯಾಂಟೀನ್ ಬಳಿ ಕರ್ನಾಟಕ ರತ್ನ ನಟ ಪುನೀತ್ ರಾಜ್ಕುಮಾರ್ ಅವರ ಪ್ರತಿಮೆಯನ್ನು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಷ್ಠಾಪಿಸಿದ್ದರು. ಇದೀಗ ಅಧಿಕಾರಿಗಳು ಏಕಾಏಕಿ ಪುತ್ಥಳಿಗಳನ್ನು ತೆರವುಗೊಳಿಸಿದ್ದಾರೆ.
ಮಾಹಿತಿ ತಿಳಿದ ರಕ್ಷಣಾ ವೇದಿಕೆ ಕಾರ್ಯಕರ್ತರು ಸ್ಥಳಕ್ಕೆ ಆಗಮಿಸಿ ಅಧಿಕಾರಿಗಳ ಜೊತೆ ಕೆಲಕಾಲ ವಾಗ್ವಾದ ನಡೆಸಿದ್ದಾರೆ. ಆದರೆ ಅಧಿಕಾರಿಗಳು ಯಾರಿಗೂ ಕ್ಯಾರೇ ಎನ್ನದೇ ಪ್ರತಿಮೆಗಳನ್ನು ತೆರವುಗೊಳಿಸಿದ್ದಾರೆ. ಹೀಗಾಗಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ನಮಗೆ ಯಾವುದೇ ಮಾಹಿತಿ ನೀಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.